ಭಟ್ಕಳ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ರೌಡಿ ಆಸಾಮಿಗಳನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಮಾವಳ್ಳಿ-2 ನಿವಾಸಿ ಶೇಖರ ಮಂಜುನಾಥ ನಾಯ್ಕ (25) ಹಾಗೂ ಕೋಣಾರ ಕೆರೆಹಿತ್ತಲ ನಿವಾಸಿ ಮಿಥುನ ಕುಪ್ಪಯ್ಯ ನಾಯ್ಕ (27) ವಿರುದ್ಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಇಬ್ಬರ ಮೇಲೂ ರೌಡಿ ಶೀಟ್ ತೆರೆಯಲಾಗಿದ್ದು, ಅವರ ಚಲನವಲನಗಳ ಮೇಲೆ ನಿಗಾ ಇಡಲಾಗಿತ್ತು. ಆದರೂ ಸಹ ಅವರು ಅಪರಾಧ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ.
ಇವರ ಚಟುವಟಿಕೆಗಳು ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದಾಗಿ ಕಂಡುಬಂದ ಹಿನ್ನೆಲೆಯಲ್ಲಿ ಮುರ್ಡೇಶ್ವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಗಡಿಪಾರು ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಮೇ 20ರಂದು ಗಡಿಪಾರು ಆದೇಶ ಹೊರಡಿಸಲಾಗಿದೆ. ಅದರಂತೆ ಶೇಖರ ನಾಯ್ಕನನ್ನು ತುಮಕೂರು ಜಿಲ್ಲೆಯ ಹೊಸಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಮಿಥುನ ನಾಯ್ಕನನ್ನು ವಿಜಯಪುರ ಜಿಲ್ಲೆಯ ಗಾಂಧಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಅವಧಿಗೆ ಗಡಿಪಾರು ಮಾಡಲಾಗಿದೆ.
ಆದೇಶದಂತೆ ಇಬ್ಬರನ್ನೂ ಸಂಬಂಧಿಸಿದ ಜಿಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಮುರ್ಡೇಶ್ವರ ಠಾಣೆಯ ಪೊಲೀಸರು ಹಾಜರುಪಡಿಸಿದ್ದಾರೆ.