ಬನವಾಸಿ: ಬಾಲ್ಯದ ಶಿಕ್ಷಣದಲ್ಲಿ ಪೋಷಕರ ಪಾತ್ರ ಬಹುಮುಖ್ಯವಾಗಿದ್ದು, ಮಕ್ಕಳಿಗೆ ಸುರಕ್ಷಿತ, ಪ್ರೋತ್ಸಾಹದಾಯಕ ಹಾಗೂ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸುವುದು ಅವರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಸಿಆರ್ಪಿ ನಾಗರಾಜ ಪಟಗಾರ ಹೇಳಿದರು.
ಸಮೀಪದ ಕಂತ್ರಾಜಿ ಗ್ರಾಮದ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಣಿ ಚೆನ್ನಮ್ಮ ಮಹಿಳಾ ಜ್ಞಾನ ವಿಕಾಸ ಕೇಂದ್ರ ಹಮ್ಮಿಕೊಂಡಿದ್ದ ‘ಶಿಕ್ಷಣದ ಕುರಿತು ಮಾಹಿತಿ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಸಾಮಾಜಿಕ ಹಾಗೂ ಭಾವನಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಪೋಷಕರ ಬೆಂಬಲ ಅತ್ಯಗತ್ಯ. ನಿರಂತರ ಮಾರ್ಗದರ್ಶನ, ಪ್ರೀತಿ ಮತ್ತು ವಾತ್ಸಲ್ಯದ ಮೂಲಕ ಮಕ್ಕಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು, ಸಹಾನುಭೂತಿ ಬೆಳೆಸಿಕೊಳ್ಳಲು ಹಾಗೂ ಆರೋಗ್ಯಕರ ಸಂಬಂಧಗಳನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ತಾಲ್ಲೂಕು ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ ಮಾತನಾಡಿ, ಮಗುವಿನ ಶೈಕ್ಷಣಿಕ ಪ್ರಗತಿಗೆ ಪೋಷಕರು ಮತ್ತು ಶಿಕ್ಷಕರ ನಡುವಿನ ಪರಿಣಾಮಕಾರಿ ಸಂವಹನ ಅತ್ಯಗತ್ಯ. ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಪೋಷಕರು ತಮ್ಮ ಮಕ್ಕಳ ಸಾಮರ್ಥ್ಯ, ಪ್ರಗತಿ ಹಾಗೂ ಸುಧಾರಣೆಯ ಅಗತ್ಯವಿರುವ ಕ್ಷೇತ್ರಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ರಾಣಿ ಚೆನ್ನಮ್ಮ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಶಶಿಕಲಾ ಅಧ್ಯಕ್ಷತೆ ವಹಿಸಿದ್ದರು. ಸೇವಾ ಪ್ರತಿನಿಧಿ ಶಿವಾಜಿ ಹಾಗೂ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.