ಕಾರವಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸುವುದಕ್ಕಿಂತ ಶಾಶ್ವತ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ ಸಿಇಒ ಡಾ. ದಿಲೀಷ್ ಶಶಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಹಳಿಯಾಳ, ಮುಂಡಗೋಡು ಹಾಗೂ ಕರಾವಳಿ ಭಾಗಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಮುಂಜಾಗ್ರತಾ ಯೋಜನೆ ರೂಪಿಸುವಂತೆ ನಿರ್ದೇಶನ ನೀಡಿದರು.
ಸ್ಥಳೀಯವಾಗಿ ನೀರು ಲಭ್ಯವಿಲ್ಲದ ಪ್ರದೇಶಗಳಿಗೆ ದೂರದ ಜಲಮೂಲಗಳಿಂದ ಹೊಸ ಪೈಪ್ಲೈನ್ ವಿಸ್ತರಿಸುವ ಯೋಜನೆ ರೂಪಿಸಬೇಕು. ಕರಾವಳಿ ಭಾಗಗಳಲ್ಲಿ ಉಪ್ಪುನೀರಿನ ಸಮಸ್ಯೆ ಇರುವುದರಿಂದ ಪರ್ಯಾಯ ಜಲಮೂಲಗಳ ಬಗ್ಗೆಯೂ ಗಮನಹರಿಸಬೇಕು ಎಂದರು.
ಮಳೆಯಿಂದ ವಿಳಂಬವಾಗಿರುವ ಪೈಪ್ಲೈನ್ ಹಾಗೂ ಬೋರ್ವೆಲ್ ಕಾಮಗಾರಿಗಳನ್ನು ಮಳೆ ಕಡಿಮೆಯಾಗುತ್ತಿದ್ದಂತೆ ಮುಂದಿನ ವಾರದಿಂದ ವೇಗಗೊಳಿಸುವಂತೆ ಸೂಚಿಸಿದ ಸಿಇಒ, ಜಿಯೋ-ಟ್ಯಾಗಿಂಗ್, ಬೋರ್ವೆಲ್ ಸ್ಥಳ ಗುರುತಿಸುವಿಕೆ ಹಾಗೂ ಕಾಮಗಾರಿ ಫೋಟೋ ಅಪ್ಲೋಡ್ಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು.
ಕಾಮಗಾರಿ ಪೂರ್ಣಗೊಂಡು ದಾಖಲೆಗಳು ಸರಿಯಾಗಿದ್ದರೆ ಮಾತ್ರ ಗುತ್ತಿಗೆದಾರರ ಬಿಲ್ ಪಾವತಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಗ್ರಾಮ ಪಂಚಾಯತಿ ಹಾಗೂ ಪಿಡಿಒಗಳಿಗೆ ಮಾಹಿತಿ ನೀಡದೆ ಯಾವುದೇ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಬಾರದು ಎಂದರು.
ಈ ಬಾರಿ ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ನೀಡಿರುವುದರಿಂದ ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಇದೇ ವೇಳೆ ಹರ್ ಘರ್ ಜಲ್ ಹಾಗೂ ಸುಜಲ್ ಗಾವ್ ಯೋಜನೆಗಳ ದತ್ತಾಂಶವನ್ನು ಪೋರ್ಟಲ್ನಲ್ಲಿ ನಿಖರವಾಗಿ ದಾಖಲಿಸುವಂತೆ ಸೂಚಿಸಿದರು. ಕೇಂದ್ರದ ಅನುದಾನ ಬಿಡುಗಡೆಯು ಪೋರ್ಟಲ್ನಲ್ಲಿನ ಯೋಜನಾ ಪ್ರಗತಿಯನ್ನೂ ಆಧರಿಸಿರುವುದರಿಂದ ಮಾಹಿತಿ ದಾಖಲಿಸುವಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಭಕ್ಷ್, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜನೀಯರ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.