ಕಾರವಾರ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ, ಸಂಬಂಧಿಸಿದ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸುವ ಉದ್ದೇಶದಿಂದ ಶನಿವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ‘ಪ್ರಜಾ ಸೇವಾ ಆಂದೋಲನ’ಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಂಕೋಲಾದಲ್ಲಿ ಹಾಗೂ ಕುಮಟಾ, ಭಟ್ಕಳ, ಶಿರಸಿ, ಯಲ್ಲಾಪುರ ಮತ್ತು ಹಳಿಯಾಳ ತಾಲ್ಲೂಕಿನ ವಿವಿಧ ಹೋಬಳಿಗಳಲ್ಲಿ ನಡೆದ ಸಭೆಗಳಲ್ಲಿ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟು 1,383 ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳು ಸದ್ಯ ಪರಿಶೀಲನೆ ಹಾಗೂ ವಿಲೇವಾರಿ ಹಂತದಲ್ಲಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ಕಾಲಮಿತಿಯಲ್ಲಿ ಸೂಕ್ತ ಪರಿಹಾರ ಒದಗಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಅರ್ಜಿಗಳ ಪೈಕಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಗರಿಷ್ಠ 451 ಅರ್ಜಿಗಳು ಸಲ್ಲಿಕೆಯಾಗಿವೆ. ನಂತರದ ಸ್ಥಾನದಲ್ಲಿ ಕಂದಾಯ ಇಲಾಖೆಗೆ 270, ನಗರಾಭಿವೃದ್ಧಿ ಇಲಾಖೆಗೆ 135, ವಸತಿ ಇಲಾಖೆಗೆ 128 ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 102 ಅರ್ಜಿಗಳು ಬಂದಿವೆ.
ಇದರೊಂದಿಗೆ ಹೆಸ್ಕಾಂ ಇಲಾಖೆಗೆ 51, ಲೋಕೋಪಯೋಗಿ ಇಲಾಖೆಗೆ 50, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ 46 ಮತ್ತು ಸಾರಿಗೆ ಇಲಾಖೆಗೆ 30 ಅರ್ಜಿಗಳು ಸಲ್ಲಿಕೆಯಾಗಿವೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 27, ಸಣ್ಣ ನೀರಾವರಿಗೆ 13, ಕಾರ್ಮಿಕ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಗೆ ತಲಾ 12, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ 10 ಅರ್ಜಿಗಳು ಬಂದಿವೆ.
ಅರಣ್ಯ ಇಲಾಖೆಗೆ 7, ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ 6, ಡಿಪಿಎಆರ್ (ಇ-ಆಡಳಿತ) ಹಾಗೂ ಜಲಸಂಪನ್ಮೂಲ ಇಲಾಖೆಗೆ ತಲಾ 5, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 4 ಅರ್ಜಿಗಳು ಸಲ್ಲಿಕೆಯಾಗಿವೆ. ಕೃಷಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ತಲಾ 3 ಅರ್ಜಿಗಳು ಬಂದಿವೆ.
ಸಹಕಾರ, ಮೂಲಸೌಕರ್ಯ, ಸಮಾಜ ಕಲ್ಯಾಣ, ಹಣಕಾಸು, ಗೃಹ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ತಲಾ 2 ಅರ್ಜಿಗಳು ಹಾಗೂ ಐಟಿ-ಬಿಟಿ ಇಲಾಖೆಗೆ ಒಂದು ಅರ್ಜಿ ಸಲ್ಲಿಕೆಯಾಗಿದೆ.
ಸಾರ್ವಜನಿಕರಿಂದ ಬಂದ 1,383 ಅರ್ಜಿಗಳು ಜಿಲ್ಲೆಯ ವಿವಿಧ ಭಾಗಗಳ ಜನರು ಎದುರಿಸುತ್ತಿರುವ ಸಮಸ್ಯೆಗಳ ಚಿತ್ರಣವೂ ಹೌದು. ಇದೀಗ ಈ ಅರ್ಜಿಗಳ ತ್ವರಿತ ಪರಿಶೀಲನೆ ಹಾಗೂ ಪರಿಣಾಮಕಾರಿ ವಿಲೇವಾರಿಯತ್ತ ಸಾರ್ವಜನಿಕರ ಗಮನ ನೆಟ್ಟಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ಆಡಳಿತ ವ್ಯವಸ್ಥೆ ನೇರವಾಗಿ ಸ್ಪಂದಿಸುವ ವೇದಿಕೆಯಾಗಿ ನಡೆದಿರುವ ‘ಪ್ರಜಾ ಸೇವಾ ಆಂದೋಲನ’ ಎಷ್ಟರ ಮಟ್ಟಿಗೆ ಫಲ ನೀಡಲಿದೆ ಎಂಬುದು, ಸಲ್ಲಿಕೆಯಾಗಿರುವ ಅರ್ಜಿಗಳಿಗೆ ದೊರೆಯುವ ಪರಿಹಾರದ ವೇಗ ಮತ್ತು ಗುಣಮಟ್ಟದ ಮೇಲೆ ಅವಲಂಬಿತವಾಗಿದೆ.