ಸಾರ್ವಜನಿಕರ ಅಹವಾಲು ಆಲಿಸಲಿರುವ ಶಾಸಕ ಶಿವರಾಮ ಹೆಬ್ಬಾರ್
ಯಲ್ಲಾಪುರ: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರದ ‘ಪ್ರಜಾ ಸೇವೆ ಅಭಿಯಾನ’ ಕಾರ್ಯಕ್ರಮವನ್ನು ಸೆ.19ರಂದು ಯಲ್ಲಾಪುರ ತಾಲೂಕಿನ ಕಣ್ಣಿಗೇರಿಯಲ್ಲಿ ಆಯೋಜಿಸಲಾಗಿದೆ.
ಶಾಸಕ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳು, ಅಹವಾಲುಗಳು ಮತ್ತು ಬೇಡಿಕೆಗಳನ್ನು ಶಾಸಕರ ಗಮನಕ್ಕೆ ತರಬಹುದಾಗಿದೆ.
ಸಾರ್ವಜನಿಕರಿಂದ ಸ್ವೀಕರಿಸುವ ಅಹವಾಲುಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರ ಕಾರ್ಯಾಲಯ ತಿಳಿಸಿದೆ.
ಕಣ್ಣಿಗೇರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ನೇರವಾಗಿ ತಿಳಿಸುವ ಮೂಲಕ ‘ಪ್ರಜಾ ಸೇವೆ ಅಭಿಯಾನ’ದ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕರ ಕಾರ್ಯಾಲಯದ ಪ್ರಕಟಣೆ ಮನವಿ ಮಾಡಿದೆ.