ಅಂಕೋಲಾ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಖಾಸಗಿ ಶಾಲಾ ಶಿಕ್ಷಕಿಗೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಪೂಜಗೇರಿ ಸೇತುವೆ ಸಮೀಪ ನಡೆದಿದೆ.
ಜುಲೈ 31ರಂದು ಸಂಜೆ 5 ಗಂಟೆ ಸುಮಾರಿಗೆ ಶಟಗೇರಿ ನಿವಾಸಿ ವಿಘ್ನೇಶ್ ಗಣಪತಿ ನಾಯಕ ತನ್ನ ಕೆಎ-30/ವಿ-4218 ಸಂಖ್ಯೆಯ ಬೈಕ್ನಲ್ಲಿ ಮಂಜುಗುಣಿ ಕಡೆಯಿಂದ ಅಂಕೋಲಾ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಿದ್ದಾಗ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪೂಜಗೇರಿ ನಿವಾಸಿ, ಖಾಸಗಿ ಶಿಕ್ಷಕಿ ಶಿಲ್ಪಾ ವಿನಾಯಕ ಗಾಂವಕರ (32) ಅವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಶಿಲ್ಪಾ ಅವರ ತಲೆ, ಬಲಗೈ, ಬಲಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ ಬೈಕ್ ಸವಾರ ವಿಘ್ನೇಶ್ಗೂ ಗಾಯಗಳಾಗಿವೆ.
ಗಾಯಾಳುವನ್ನು ಮೊದಲಿಗೆ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ವೈದ್ಯರ ಸಲಹೆ ಮೇರೆಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುವಿನ ಅತ್ತೆ ಲಕ್ಷ್ಮೀ ಕೋನು ಗಾಂವಕರ ನೀಡಿದ ದೂರಿನ ಮೇರೆಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.