ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ‘ಬಲಿದಾನ್ ದಿವಸ್’ ಕಾರ್ಯಕ್ರಮದ ಬಳಿಕ ಪ್ರಚೋದನಕಾರಿ ಭಾಷಣದ ಆರೋಪ ಕೇಳಿಬಂದಿದ್ದು, ಬಿಜೆಪಿಯ ಇಬ್ಬರು ಪ್ರಮುಖ ರಾಜಕೀಯ ನಾಯಕರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮಂಡ್ಯ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಸೋಮವಾರ ಮದ್ದೂರಿನ ಹಳೆ ಬಸ್ ನಿಲ್ದಾಣದ ಬಳಿ ಹಿಂದೂ ಪರ ಸಂಘಟನೆಗಳು ಆಯೋಜಿಸಿದ್ದ ‘ಬಲಿದಾನ್ ದಿವಸ್’ ಕಾರ್ಯಕ್ರಮದಲ್ಲಿ ಈ ಇಬ್ಬರು ನಾಯಕರು ಭಾಗವಹಿಸಿ ಭಾಷಣ ಮಾಡಿದ್ದರು. ಈ ವೇಳೆ ಬಹಿರಂಗ ಸಭೆಯಲ್ಲಿ ರೋಷಾವೇಶದಿಂದ ಮಾತನಾಡಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಆರೋಪ ಕೇಳಿಬಂದಿದೆ.
ಇದರ ಜೊತೆಗೆ, ಅವರ ಭಾಷಣದಿಂದ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂಬ ದೂರುಗಳ ಆಧಾರದ ಮೇಲೆ, ಮದ್ದೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.