ಮೈಸೂರು : ಪುಟ್ಟಣ್ಣ ಕಣಗಾಲ್ ಅವರ ನೆನಪನ್ನು ಶಾಶ್ವತಗೊಳಿಸುವ ಉದ್ದೇಶದಿಂದ ಸರ್ಕಾರ ಘೋಷಿಸಿರುವ ಮ್ಯೂಸಿಯಂ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಗುರುವಾರ ಪೂರ್ವಭಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದಲ್ಲಿರುವ ಪುಟ್ಟಣ್ಣ ಕಣಗಾಲ್ ಅವರ ನಿವಾಸಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಹಾಗೂ ಚಲನಚಿತ್ರ ಅಕಾಡೆಮಿ ರಿಜಿಸ್ಟರ್ ವಿನೋದ್ ಚಂದ್ರ ಭೇಟಿ ನೀಡಿ, ಮನೆಯ ಸ್ಥಿತಿಗತಿ ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಚೆಗೆ ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ ಪುಟ್ಟಣ್ಣ ಕಣಗಾಲ್ ಅವರ ಮನೆಯನ್ನು ಮ್ಯೂಸಿಯಂ ಆಗಿ ಅಭಿವೃದ್ಧಿಪಡಿಸುವ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಇಲಾಖೆಯ ಸೂಚನೆಯಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.“ಸರ್ಕಾರದ ಕಾರ್ಯದರ್ಶಿಗಳು ಹಾಗೂ ಇಲಾಖೆಯ ಆಯುಕ್ತರ ಸೂಚನೆಯಂತೆ ಭೇಟಿ ನೀಡಲಾಗಿದೆ. ಮನೆಯ ಸ್ಥಿತಿ, ಸ್ಥಳೀಯರ ಅಭಿಪ್ರಾಯ ಮತ್ತು ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಇಲಾಖೆಗೆ ವರದಿ ಸಲ್ಲಿಸಲಾಗುವುದು. ಸ್ಮಾರಕ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಸ್ಟಿಮೆಟ್ ಸಿದ್ಧಪಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಇದು ಪೂರ್ವಭಾವಿ ಭೇಟಿ,” ಎಂದು ವಿನೋದ್ ಚಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ಕಣಗಾಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ್ ಕೆ., ಮುಖಂಡರಾದ ಮಂಜುನಾಥ್ ಶಾಸ್ತ್ರೀ, ಕೆ.ಎಸ್. ಚಂದ್ರಶೇಖರ್, ದತ್ತಾತ್ರೇಯ ಹಾಗೂ ಬಿಲ್ ಕಲೆಕ್ಟರ್ ಪಾಂಡು ಉಪಸ್ಥಿತರಿದ್ದರು.