ಯಲ್ಲಾಪುರ: ಚೀನಾದ ಓರ್ಡೋಸ್ನಲ್ಲಿ ನಡೆದ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಎರಡು ಬೆಳ್ಳಿ ಪದಕಗಳನ್ನು ಗೆದ್ದು ದೇಶ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿರುವ ಹಳಿಯಾಳ ತಾಲೂಕಿನ ಬೆಳವಟಿಗೆ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ್ ಮಾದಪ್ಪಗೌಡ ಅವರಿಗೆ ಯಲ್ಲಾಪುರದ ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಅಭಿನಂದನೆ ಸಲ್ಲಿಸಿದ್ದಾರೆ.
ಪುರುಷರ 10,000 ಮೀಟರ್ ಓಟದಲ್ಲಿ 29 ನಿಮಿಷ 33.54 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದ್ದಿರುವುದು ಹಾಗೂ ಇದೇ ಚಾಂಪಿಯನ್ಶಿಪ್ನ 5,000 ಮೀಟರ್ ಓಟದಲ್ಲಿಯೂ ಬೆಳ್ಳಿ ಪದಕ ತನ್ನದಾಗಿಸಿಕೊಂಡಿರುವುದು ಉತ್ತರ ಕನ್ನಡ ಜಿಲ್ಲೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.
ಒಂದೇ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಸತತ ಎರಡು ಪದಕಗಳನ್ನು ಗೆದ್ದು ಅಪರೂಪದ ಸಾಧನೆ ಮಾಡಿರುವ ಶಿವಾಜಿ ಅವರ ಪರಿಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸ ಇಂದಿನ ಯುವಜನತೆಗೆ ಮಾದರಿಯಾಗಿದೆ. ಕೆಲವು ತಿಂಗಳ ಹಿಂದಷ್ಟೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದು ಏಷ್ಯನ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದ ಅವರು, ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಶಿವಾಜಿ ಇನ್ನಷ್ಟು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಇನ್ನಷ್ಟು ಎತ್ತರಕ್ಕೆ ಹಾರಿಸಿ, ಒಲಿಂಪಿಕ್ಸ್ ಸೇರಿದಂತೆ ವಿಶ್ವಮಟ್ಟದ ಸ್ಪರ್ಧೆಗಳಲ್ಲಿಯೂ ಪದಕ ಗೆದ್ದು ದೇಶಕ್ಕೆ ಮತ್ತಷ್ಟು ಕೀರ್ತಿ ತರಲಿ ಎಂದು ರಾಮು ನಾಯ್ಕ ಶುಭ ಹಾರೈಸಿದ್ದಾರೆ.