ಯಲ್ಲಾಪುರ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್ಸಿಎಲ್ಟಿ) ಬೆಂಗಳೂರು ಪೀಠವು ಆರ್ಥಿಕ ದಿವಾಳಿ ವ್ಯಕ್ತಿ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಸೀರ್ ಅಹ್ಮದ್ ಅವರಿಗೆ ಸಂಬಂಧಿಸಿದ ಸ್ಕಾಟ್ಸ್ ಗಾರ್ಮೆಂಟ್ ಲಿಮಿಟೆಡ್ ಸಂಸ್ಥೆಯ ಸಾಲ ವ್ಯವಹಾರ ಮತ್ತು ಬ್ಯಾಂಕ್ಗಳಿಗೆ ಬಾಕಿಯಾಗಿರುವ ಮೊತ್ತದ ಕುರಿತು ಸಂಪೂರ್ಣ ಮಾಹಿತಿ ಹೊರಬರಬೇಕಿದೆ ಎಂದು ಹೇಳಿದ್ದಾರೆ.
ಹಿಂದೆ ವಿಜಯ್ ಮಲ್ಯ ಹಾಗೂ ಲಲಿತ್ ಮೋದಿ ಪ್ರಕರಣಗಳಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದ ಕಾಂಗ್ರೆಸ್ ನಾಯಕರು, ಈಗ ತಮ್ಮ ಪಕ್ಷದ ನಾಯಕರ ವಿರುದ್ಧದ ಆರೋಪಗಳ ಕುರಿತು ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಸೀರ್ ಅಹ್ಮದ್ ಅವರು ಮಾಜಿ ಸಚಿವರು, ಹಾಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದವರಾಗಿದ್ದು, ಇಂತಹ ಗಂಭೀರ ಬೆಳವಣಿಗೆಯ ಹಿಂದೆ ಇರುವ ಎಲ್ಲಾ ಅಂಶಗಳ ಬಗ್ಗೆ ತನಿಖೆ ನಡೆಯಬೇಕು.
ರಾಜ್ಯದಲ್ಲಿ ಹಿಂದೆ ನಡೆದಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣ, ಬಿಟ್ಕಾಯಿನ್ ಪ್ರಕರಣ ಸೇರಿದಂತೆ ವಿವಿಧ ಆರ್ಥಿಕ ಹಗರಣಗಳ ಉಲ್ಲೇಖ ಮಾಡಿರುವ ರಾಮು ನಾಯ್ಕ, ಯಾವುದೇ ವ್ಯಕ್ತಿ ಅಥವಾ ಪಕ್ಷವನ್ನು ರಕ್ಷಿಸದೆ, ಕಾನೂನಿನ ಪ್ರಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು.
ಪ್ರಕರಣದ ಹಿಂದೆ ಇನ್ನಿತರ ಪ್ರಭಾವಿ ವ್ಯಕ್ತಿಗಳ ಪಾತ್ರವಿದೆಯೇ ಎಂಬುದನ್ನೂ ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.