ಕೈಗಾ ಸುತ್ತಮುತ್ತ ಗಣಿಗಾರಿಕೆಗೆ ಅವಕಾಶ ನೀಡದಿರಲು ಜಿಲ್ಲಾಡಳಿತಕ್ಕೆ ಒತ್ತಾಯ
ಯಲ್ಲಾಪುರ: ಕೈಗಾ ಅಣುವಿದ್ಯುತ್ ಸ್ಥಾವರಗಳ ಸುತ್ತಮುತ್ತ ಯಾವುದೇ ರೀತಿಯ ಗಣಿಗಾರಿಕೆಗೆ ಅವಕಾಶ ನೀಡದಂತೆ ಜಿಲ್ಲಾ ಆಡಳಿತವನ್ನು ಒತ್ತಾಯಿಸಿರುವ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರ ನಿಲುವನ್ನು ನಾಗರಿಕ ವೇದಿಕೆ ಸ್ವಾಗತಿಸಿ ಅಭಿನಂದಿಸಿದೆ.
ಈ ಕುರಿತು ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಪ್ರಕಟಣೆ ನೀಡಿ, ಕೈಗಾ ಪರಿಸರದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದರೆ ಪರಿಸರದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುವುದರ ಜೊತೆಗೆ, ಗಣಿಗಾರಿಕೆಯಲ್ಲಿ ಬಳಸುವ ಸ್ಫೋಟಕಗಳಿಂದ ಅಣುವಿದ್ಯುತ್ ಸ್ಥಾವರಗಳ ಸುರಕ್ಷತೆಗೂ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಅಣುಸ್ಥಾವರಗಳಿಗೆ ಯಾವುದೇ ರೀತಿಯ ಅಪಾಯ ಸಂಭವಿಸಿದರೆ ಅದರ ಪರಿಣಾಮ ಇಡೀ ಉತ್ತರ ಕನ್ನಡ ಜಿಲ್ಲೆಯ ಮೇಲೆಯೇ ಬೀಳುವ ಸಾಧ್ಯತೆ ಇದೆ. ಹೀಗಾಗಿ ಕೈಗಾ ಸುತ್ತಮುತ್ತ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂಬ ನಿಲುವನ್ನು ಮೊದಲ ಬಾರಿಗೆ ನಾಗರಿಕ ವೇದಿಕೆ ಧ್ವನಿ ಎತ್ತಿತ್ತು.
ನಾಗರಿಕ ವೇದಿಕೆ ವ್ಯಕ್ತಪಡಿಸಿದ್ದ ಕಳವಳಕ್ಕೆ ಧ್ವನಿಗೂಡಿಸಿ, ಜಿಲ್ಲಾ ಆಡಳಿತದ ಗಮನ ಸೆಳೆದ ಶಾಸಕ ಶಿವರಾಮ ಹೆಬ್ಬಾರ್ ಅವರ ಕ್ರಮ ಶ್ಲಾಘನೀಯವಾಗಿದೆ ಎಂದು ರಾಮು ನಾಯ್ಕ ಹೇಳಿದ್ದಾರೆ.
ಕೈಗಾ ಪ್ರದೇಶದ ಪರಿಸರ ಹಾಗೂ ಅಣುಸ್ಥಾವರದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಭವಿಷ್ಯದಲ್ಲಿಯೂ ಈ ಪ್ರದೇಶದಲ್ಲಿ ಯಾವುದೇ ರೀತಿಯ ಗಣಿಗಾರಿಕೆಗೆ ಅನುಮತಿ ನೀಡಬಾರದು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.