ಶಿರಸಿ: ಸಾಮಾಜಿಕ ಹೋರಾಟಗಾರ ಹಾಗೂ ಹಿರಿಯ ವಕೀಲ ರವೀಂದ್ರ ನಾಯ್ಕ ಅವರಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಮಟ್ಟದ ‘ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ, ಬೆಂಗಳೂರು ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸಾಮಾಜಿಕ ಸೇವೆ ಹಾಗೂ ಬಹುಮುಖ ಹೋರಾಟವನ್ನು ಗುರುತಿಸಿ ರವೀಂದ್ರ ನಾಯ್ಕ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ರವೀಂದ್ರ ನಾಯ್ಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಳೆದ ನಾಲ್ಕು ದಶಕಗಳಿಂದ ಮದ್ಯಪಾನ ವಿರೋಧಿ ಹೋರಾಟ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಅರಣ್ಯ ಭೂಮಿ ಹಕ್ಕಿನ ಹೋರಾಟ ಸೇರಿದಂತೆ ಹಲವು ಸಾಮಾಜಿಕ ಚಳವಳಿಗಳಲ್ಲಿ ರವೀಂದ್ರ ನಾಯ್ಕ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ನಿರಂತರ ಹೋರಾಟ ಮತ್ತು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದರು.
ನಿ. ಪ್ರ. ಶಿವಾನುಭವ ಚರಮೂರ್ತಿ ಶ್ರೀ ಶ್ರೀ ಶಿವರುದ್ರ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಆರಂಭಗೊಂಡಿತು. ಶಿಕ್ಷಣ ತಜ್ಞ ಪ್ರೊ. ಎ. ಶಿವಕುಮಾರ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಹಿರಿಯ ವಿದ್ವಾಂಸ ಡಾ. ಸಿ.ಯು. ಮಂಜುನಾಥ, ವಿಶೇಷ ಆಹ್ವಾನಿತರಾಗಿ ಪ್ರಗತಿಪರ ಕೃಷಿಕ ವಿ.ಕೆ. ರಾಜೇಂದ್ರ ದಾವಣಗೆರೆ ಭಾಗವಹಿಸಿದ್ದರು.
ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಎಸ್.ಆರ್. ವಿಜಯ ಸಮರ್ಥ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಪ್ರಶಸ್ತಿ ಆಯ್ಕೆಯ ಸಂದರ್ಭದಲ್ಲಿ ‘ವಿಜಯವಾಣಿ’ ದಿನಪತ್ರಿಕೆಯಿಂದ ಮಾಹಿತಿ ಹಾಗೂ ಸಹಕಾರ ಪಡೆಯಲಾಗಿತ್ತು ಎಂದು ಸಂಘಟಕರು ತಿಳಿಸಿದರು.