ಹೊನ್ನಾವರದಲ್ಲಿ ಯುವಕರಿಗೆ ರೂಪಾಲಿ ನಾಯ್ಕ ಕರೆ
ಹೊನ್ನಾವರ: ಕನಸು ಕಾಣಿ… ಆದರೆ ಆ ಕನಸನ್ನು ದೇಶದ ಅಭಿವೃದ್ಧಿಯೊಂದಿಗೆ ಜೋಡಿಸಿ. ಮೊದಲು ದೇಶ, ನಂತರ ಪಕ್ಷ, ಬಳಿಕ ವ್ಯಕ್ತಿ. ಇದೇ ಪ್ರತಿಯೊಬ್ಬ ಕಾರ್ಯಕರ್ತನ ಧ್ಯೇಯವಾಗಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.
ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ಹೊನ್ನಾವರದಲ್ಲಿ ಆಯೋಜಿಸಿದ್ದ ‘ಯುವ ಸಂಕಲ್ಪ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಕರು ಕೇವಲ ರಾಜಕೀಯದಲ್ಲಿ ಭಾಗವಹಿಸುವುದಷ್ಟೇ ಅಲ್ಲ, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ರಾಷ್ಟ್ರಭಕ್ತಿ, ಶಿಸ್ತು, ಸೇವೆ ಹಾಗೂ ಸಂಘಟನೆಯ ತತ್ವಗಳನ್ನು ಅಳವಡಿಸಿಕೊಂಡಾಗ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಬಳಿಕ ಕರ್ನಾಟಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಯುವ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ‘ಡ್ರಗ್ಸ್ ಬೇಡ ಬ್ರೋ’ ಜಾಗೃತಿ ಅಭಿಯಾನದ ಪೋಸ್ಟರ್ನ್ನು ಬಿಡುಗಡೆ ಮಾಡಲಾಯಿತು. ಯುವ ಸಮಾಜವನ್ನು ಮಾದಕ ವ್ಯಸನದಿಂದ ದೂರವಿಟ್ಟು ಆರೋಗ್ಯಕರ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣ ಮಾಡುವ ಸಂಕಲ್ಪವನ್ನು ಈ ಮೂಲಕ ವ್ಯಕ್ತಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ, ಕುಮಟಾ ಶಾಸಕ ದಿನಕರ ಶೆಟ್ಟಿ, ಮಾಜಿ ಸಚಿವ ಶಿವಾನಂದ ನಾಯ್ಕ್, ರತ್ನಾಕರ ಮಟ್ಟನ್ನವರ, ಈಶ್ವರ್ ನಾಯ್ಕ್, ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ್, ಮಾಜಿ ಜಿಲ್ಲಾ ಅಧ್ಯಕ್ಷ ವೆಂಕಟೇಶ್ ನಾಯ್ಕ್, ಕೆ.ಜೆ. ನಾಯ್ಕ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರೇಮಕುಮಾರ್ ನಾಯ್ಕ್, ಶಿವಾನಂದ ಮರಾಟೆ, ಶಿವಾನಿ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು, ಯುವ ಮೋರ್ಚಾ ಕಾರ್ಯಕರ್ತರು ಹಾಗೂ ನೂರಾರು ಯುವಕರು ಭಾಗವಹಿಸಿದ್ದರು.
ಕಾರ್ಯಕ್ರಮದ ಅಂತ್ಯದಲ್ಲಿ ಯುವ ಕಾರ್ಯಕರ್ತರು “ಯುವಶಕ್ತಿ ದೇಶದ ಶಕ್ತಿ” ಎಂಬ ಘೋಷಣೆಯೊಂದಿಗೆ ರಾಷ್ಟ್ರಸೇವೆ ಮತ್ತು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪ ಕೈಗೊಂಡರು.