ಅವರ್ಸಾ ಬಳಿ ಸೀಬರ್ಡ್ ಬಸ್ ಪಲ್ಟಿ; ತಪ್ಪಿದ ಅನಾಹುತ
ಕಾರವಾರ: ಅಂಕೋಲಾದಿಂದ ಕಾರವಾರ ಕಡೆಗೆ ಬರುತ್ತಿದ್ದ ಸೀಬರ್ಡ್ ಬಸ್ ಅವರ್ಸಾ ಸಮೀಪದ ಕವಲಗದ್ದ ಸೇತುವೆ ಬಳಿ ಅಪಘಾತಕ್ಕೀಡಾಗಿ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ರಸ್ತೆ ಬದಿಯ ಮರಕ್ಕೆ ಬಸ್ ಅಪ್ಪಳಿಸಿದ್ದರಿಂದ ಅದು ಆಳವಾದ ಕಂದಕಕ್ಕೆ ಉರುಳುವುದನ್ನು ತಪ್ಪಿಸಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ದೊಡ್ಡ ದುರಂತದಿಂದ ಪಾರಾಗಿದ್ದಾರೆ.
ಅಂಕೋಲಾದಿಂದ ಕಾರವಾರದತ್ತ ಸಂಚರಿಸುತ್ತಿದ್ದ ಬಸ್, ಅವರ್ಸಾ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಅಂಚಿನತ್ತ ಚಲಿಸಿದೆ. ಈ ವೇಳೆ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮರವೇ ಬಸ್ಸಿಗೆ ಆಸರೆಯಾದ ಕಾರಣ ಅದು ಕಂದಕಕ್ಕೆ ಬೀಳದೆ ನಿಂತಿದ್ದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದು, ಅಪಘಾತದಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಪ್ರಯಾಣಿಕರು ಸುರಕ್ಷಿತವಾಗಿ ಬಸ್ಸಿನಿಂದ ಹೊರಬಂದಿದ್ದಾರೆ.
ಅಪಘಾತದ ತಕ್ಷಣ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡರು. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ. ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.