ಯಲ್ಲಾಪುರ: ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆ, ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಕರೆ ನೀಡಿದರು.
ಪಟ್ಟಣದ ಕಾಳಮ್ಮನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವುದರ ಜೊತೆಗೆ ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆಯಾಗಿವೆ ಎಂದು ಅಭಿಪ್ರಾಯಪಟ್ಟರು.
ಇದಕ್ಕೂ ಮುನ್ನ ದೀಪ ಬೆಳಗಿಸುವ ಮೂಲಕ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಹೆಬ್ಬಾರ್, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಶಿರೀಷ್ ಪ್ರಭು, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಡಿ.ಎನ್. ಗಾಂವ್ಕರ್, ತಾಲೂಕು ಅಧ್ಯಕ್ಷ ಉಲ್ಲಾಸ್ ಶಾನಭಾಗ, ಕಾಲೇಜಿನ ಪ್ರಾಂಶುಪಾಲ ಆರ್.ಡಿ. ಜನಾರ್ಧನ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.