ಯಲ್ಲಾಪುರ: ಮಂಗಳೂರಿನಲ್ಲಿ ಪ್ರಸ್ತಾಪಿಸಲಾಗಿರುವ ಹೈಕೋರ್ಟ್ ಸಂಚಾರಿ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆ ಮಾಡುವ ಪ್ರಸ್ತಾವನೆಗೆ ಶಾಸಕ ಶಿವರಾಮ ಹೆಬ್ಬಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಜನರಿಗೆ ನ್ಯಾಯಾಂಗ ಸೇವೆ ಪಡೆಯಲು ಮತ್ತಷ್ಟು ದೂರ ಪ್ರಯಾಣಿಸುವ ಪರಿಸ್ಥಿತಿ ಎದುರಾಗಲಿದೆ ಎಂಬ ಕಾರಣಕ್ಕೆ, ಈ ಪ್ರಸ್ತಾವನೆಯನ್ನು ಮರುಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜನರ ಹಿತದೃಷ್ಟಿಯಿಂದ ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಜಿಲ್ಲೆಯನ್ನು ಸೇರಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಉತ್ತರ ಕನ್ನಡ ಜಿಲ್ಲಾ ಬಾರ್ ಅಸೋಸಿಯೇಷನ್ ಹಾಗೂ ವಿವಿಧ ಸಂಘಟನೆಗಳು ಈ ಪ್ರಸ್ತಾವನೆ ವಿರೋಧಿಸಿ ಹೋರಾಟಕ್ಕೆ ಕರೆ ನೀಡಿದ್ದು, ಈ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಕನ್ನಡವನ್ನು ಮಂಗಳೂರು ಪೀಠದ ವ್ಯಾಪ್ತಿಗೆ ಸೇರಿಸಿದರೆ ಜಿಲ್ಲೆಯ ದೂರದ ಪ್ರದೇಶಗಳ ಜನರು ನ್ಯಾಯಾಂಗ ಸೇವೆ ಪಡೆಯಲು ಸುಮಾರು 400 ಕಿಲೋಮೀಟರ್ವರೆಗೆ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಇದರಿಂದ ಸಾರ್ವಜನಿಕರಿಗೆ ಸಮಯ ಹಾಗೂ ಹಣದ ಹೆಚ್ಚುವರಿ ಹೊರೆಯ ಜೊತೆಗೆ ಪ್ರಯಾಣದ ತೊಂದರೆಯೂ ಉಂಟಾಗಲಿದೆ ಎಂದು ಹೆಬ್ಬಾರ್ ಹೇಳಿದ್ದಾರೆ.
ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಬಾರ್ ಅಸೋಸಿಯೇಷನ್ನ ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಜಿಲ್ಲೆಯ ಜನರಿಗೆ ನ್ಯಾಯ ದೊರೆಯುವ ರೀತಿಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭೌಗೋಳಿಕ ವ್ಯಾಪ್ತಿ, ಜನರ ಅನುಕೂಲ ಹಾಗೂ ನ್ಯಾಯಾಂಗ ಸೇವೆ ಪಡೆಯುವ ಹಕ್ಕನ್ನು ಪರಿಗಣಿಸಿಯೇ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಬೇಕು. ಜಿಲ್ಲೆಯ ಜನರ ಹಿತಕ್ಕೆ ಧಕ್ಕೆ ತರುವ ಯಾವುದೇ ಪ್ರಸ್ತಾವನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.