ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜಿಲ್ಲಾ ಪರಿಷತ್ತಿನ ಮಾಜಿ ಅಧ್ಯಕ್ಷ ರಮಾನಂದ ನಾಯಕ ಅವರ ನಿಧನಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಮಾನಂದ ನಾಯಕರು ಅತ್ಯಂತ ಸರಳ, ಸಜ್ಜನ ಹಾಗೂ ಮೌಲ್ಯಾಧಾರಿತ ರಾಜಕಾರಣಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮಾರ್ಗದರ್ಶನದಲ್ಲಿ ರಾಜಕೀಯ ಜೀವನ ಆರಂಭಿಸಿದ್ದ ಅವರು, ಅವರ ಆದರ್ಶಗಳು ಹಾಗೂ ಮೌಲ್ಯಗಳನ್ನು ಜೀವನಪೂರ್ತಿ ಅಳವಡಿಸಿಕೊಂಡು ಸಾಗಿದ ನಿಷ್ಕಲ್ಮಶ ವ್ಯಕ್ತಿತ್ವ ಹೊಂದಿದ್ದರು ಎಂದು ಸ್ಮರಿಸಿದ್ದಾರೆ.
ಜನಸೇವೆ, ಪ್ರಾಮಾಣಿಕತೆ ಹಾಗೂ ಸಹೃದಯತೆಯ ಮೂಲಕ ಜನಮನಗಳಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದ ಅವರ ನಿಧನದಿಂದ ಉತ್ತರ ಕನ್ನಡ ಜಿಲ್ಲೆಯ ರಾಜಕೀಯ, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರಗಳಿಗೆ ತುಂಬಲಾರದ ನಷ್ಟ ಉಂಟಾಗಿದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಶಾಸಕ ಹೆಬ್ಬಾರ್ ಪ್ರಾರ್ಥಿಸಿದ್ದಾರೆ.