ಸಿದ್ದಾಪುರ: ಅರಣ್ಯವಾಸಿಗಳು ಹಾಗೂ ಅಘನಾಶಿನಿ ನದಿ ಜೋಡಣೆ ವಿರೋಧ ಕುರಿತು ಮಹತ್ವದ ಸಭೆ ಮೇ 15ರಂದು ಸಿದ್ದಾಪುರದಲ್ಲಿ ನಡೆಯಲಿದೆ ಎಂದು ಹೋರಾಟಗಾರರ ವೇದಿಕೆಯ ಪ್ರಧಾನ ಸಂಚಾಲಕ ಮಾಬ್ಲೇಶ್ವರ ನಾಯ್ಕ ಬೇಡ್ಕಣಿ ತಿಳಿಸಿದ್ದಾರೆ.
ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಸಭೆಯಲ್ಲಿ ಅರಣ್ಯ ಅತಿಕ್ರಮಣದಾರರ ವಿರುದ್ಧ ನಡೆಯುತ್ತಿರುವ ಕ್ರಮಗಳು, ಮೂರು ಎಕರೆ ಸಾಗುವಳಿ ಭೂಮಿಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶದ ಕುರಿತು ಹೈಕೋರ್ಟ್ನಲ್ಲಿ ದಾಖಲಾಗಿರುವ ಪ್ರಕರಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಅಘನಾಶಿನಿ ನದಿ ಜೋಡಣೆ ಯೋಜನೆಗೆ ವಿರೋಧವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಆಕ್ಷೇಪಣಾ ಪತ್ರ, ಯುನೆಸ್ಕೋ ವಿಶ್ವ ಪರಂಪರೆ ಕೇಂದ್ರದಿಂದ ಬಂದಿರುವ ಪ್ರತಿಕ್ರಿಯೆ ಕುರಿತ ಮಾಹಿತಿಯನ್ನೂ ಸಭೆಯಲ್ಲಿ ಹಂಚಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೋರಾಟಗಾರರ ವೇದಿಕೆಯ ಜಿಲ್ಲಾ ಅಧ್ಯಕ್ಷ ರವೀಂದ್ರ ನಾಯ್ಕ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ನದಿ ಜೋಡಣೆ ಆಯೋಗಕ್ಕೆ ಸಲ್ಲಿಸಬೇಕಿರುವ ಆಕ್ಷೇಪಣೆಗಳ ಕುರಿತು ಸಾರ್ವಜನಿಕ ಅಭಿಪ್ರಾಯ ಸಂಗ್ರಹವೂ ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಅರಣ್ಯವಾಸಿಗಳು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸುವಂತೆ ಹೋರಾಟಗಾರರ ವೇದಿಕೆ ಮನವಿ ಮಾಡಿದೆ.