ಹಳೆಯದೊಂದು ಪ್ರಕರಣದಲ್ಲೂ ಭಾಗಿ | ₹9 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
>> ಶಿರಸಿ: ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಜನದಟ್ಟಣೆಯನ್ನೇ ಬಂಡವಾಳವಾಗಿಸಿಕೊಂಡು ಚಿನ್ನಾಭರಣ ಕಳವು ಮಾಡುತ್ತಿದ್ದ ಅಂತರ ಜಿಲ್ಲಾ ಮಹಿಳಾ ಕಳ್ಳಿಯನ್ನು ಶಿರಸಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತಳಿಂದ ಒಟ್ಟು 70 ಗ್ರಾಂ ತೂಕದ, ಸುಮಾರು ₹9 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ಜ್ಯೋತಿ ಅಲಿಯಾಸ್ ಸಂಜನಾ ವೆಂಕಟೇಶ ಪಸುಪುಲೇಟ್ (32) ಎಂದು ಗುರುತಿಸಲಾಗಿದೆ.
ಕಳೆದ ಜೂನ್ 3, 2026ರಂದು ಸೊರಬ ತಾಲೂಕಿನ ಚಂದ್ರಗುತ್ತಿ ನಿವಾಸಿ ಸವಿತಾ ಆನಂದ ನಾಯ್ಕ ಅವರು ತಮ್ಮ ಅಕ್ಕನನ್ನು ಬಸ್ಗೆ ಹತ್ತಿಸಲು ಶಿರಸಿ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಜನದಟ್ಟಣೆಯ ಲಾಭ ಪಡೆದ ಆರೋಪಿ, ಅವರ ವ್ಯಾನಿಟಿ ಬ್ಯಾಗ್ನ ಜಿಪ್ ತೆರೆದು 1.59 ಲಕ್ಷ ರೂ. ಮೌಲ್ಯದ ಚಿನ್ನದ ಸರ, ಕಿವಿಯೋಲೆ, ಮೊಬೈಲ್ ಫೋನ್ ಹಾಗೂ ₹8 ಸಾವಿರ ನಗದು ಕಳವು ಮಾಡಿದ್ದಳು. ಈ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್ ಅವರ ನಿರ್ದೇಶನದಂತೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತಾಂತ್ರಿಕ ಮಾಹಿತಿ, ಸಿಸಿಟಿವಿ ದೃಶ್ಯಗಳು ಹಾಗೂ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಜೂನ್ 25ರಂದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಪೊಲೀಸ್ ವಿಚಾರಣೆ ವೇಳೆ, 2025ರ ಸೆಪ್ಟೆಂಬರ್ 24ರಂದು ಇದೇ ಶಿರಸಿ ಬಸ್ ನಿಲ್ದಾಣದಲ್ಲಿ ನಡೆದ ಮತ್ತೊಂದು ಕಳವು ಪ್ರಕರಣದಲ್ಲೂ ತಾನೇ ಭಾಗಿಯಾಗಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾಳೆ. ಈ ಹಿನ್ನೆಲೆಯಲ್ಲಿ ಶಿರಸಿ ನಗರ ಪೊಲೀಸ್ ಠಾಣೆಯ ಎರಡು ಪ್ರತ್ಯೇಕ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 70 ಗ್ರಾಂ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಕಾರ್ಯಾಚರಣೆ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಶಿರಸಿ ವೃತ್ತ ನಿರೀಕ್ಷಕ ಸಂಪತ್ ಅವರ ಮಾರ್ಗದರ್ಶನದಲ್ಲಿ ನಡೆದಿದೆ.
ಶಿರಸಿ ನಗರ ಠಾಣೆಯ ಪಿಎಸ್ಐಗಳಾದ ನರಸಿಂಹಲು ಟಿ., ನಾರಾಯಣ ರಾಥೋಡ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಮತ್ತು ಕಾರವಾರ ಟೆಕ್ನಿಕಲ್ ಸೆಲ್ನ ಅಧಿಕಾರಿಗಳನ್ನೊಳಗೊಂಡ ತಂಡ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿದ್ದಾರೆ.