ಶಿರಸಿ: ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ಆತನಿಂದ 217 ಗ್ರಾಂ ಗಾಂಜಾ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜು ರಸ್ತೆಯ ಮಾರಿಕಾಂಬ ಕ್ರೀಡಾಂಗಣದ ಸಮೀಪ ಜೂನ್ 9ರಂದು ರಾತ್ರಿ 9.15ರ ಸುಮಾರಿಗೆ ಗಾಂಜಾ ಸಾಗಾಟ ಮತ್ತು ಮಾರಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು.
ಕಾರ್ಯಾಚರಣೆಯಲ್ಲಿ ರಾಜೀವ್ ನಗರ ನಿವಾಸಿ ಆನಂದ ಅಲಿಯಾಸ್ ತುರಿಮಣಿ (ತಂದೆ ಹನುಮಂತ ಬೋವಿವಡ್ಡರ) ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ ಸುಮಾರು ₹10,400 ಮೌಲ್ಯದ 217 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ಧ ಮಾದಕ ವಸ್ತು ಮತ್ತು ಮನೋವಿಕಾರಕ ದ್ರವ್ಯಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಅಡಿ ಕ್ರಮ ಕೈಗೊಳ್ಳಲಾಗಿದೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ, ಶಿರಸಿ ವೃತ್ತದ ಸಿಪಿಐ ಸಂಪತ್ ಕುಮಾರ್ ಸಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಕಾರ್ಯಾಚರಣೆಯಲ್ಲಿ ಪಿಎಸ್ಐ ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿಗಳಾದ ಸಂದೀಪ್ ನಿಂಬಾಯಿ, ರಾಕೇಶ್ ಎನ್.ಎಚ್., ಸಂತೋಷ್ ಆರ್.ಕೆ., ಅರುಣ ಲಮಾಣಿ ಮತ್ತು ಲಕ್ಷ್ಮಣ ಭಾಗವಹಿಸಿದ್ದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಇಲಾಖೆ ಅಭಿನಂದಿಸಿದೆ.