Friday, May 29, 2026
HomeLocal Newsಮಾದಕ ವಸ್ತು ಬಳಕೆ ತಡೆಗೆ ವಿಶೇಷ ಕ್ರಮ

ಮಾದಕ ವಸ್ತು ಬಳಕೆ ತಡೆಗೆ ವಿಶೇಷ ಕ್ರಮ

ಕಾರವಾರ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಸರಬರಾಜು ತಡೆಯಲು ಅನುಮಾನಾಸ್ಪದವಾಗಿ ಕಂಡು ಬರುವ ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳಲ್ಲಿ ಅನಿರೀಕ್ಷಿತ ತಪಾಸಣೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎನ್‌ಕಾರ್ಡ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾದಕ ವಸ್ತುಗಳ ಸೇವನೆ ಕುರಿತಂತೆ ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ 18ರಿಂದ 35 ವಯೋಮಿತಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ದುಶ್ಚಟಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದ್ದು, ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಅಯೋಜಿಸುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್‌ಗಳಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೇ ಔಷಧಗಳನ್ನು ಸರಬರಾಜು ಮಾಡದಂತೆ ಸೂಚನೆ ನೀಡುವಂತೆ ಮತ್ತು ಈ ಕುರಿತು ಮೆಡಿಕಲ್ ಶಾಪ್‌ಗಳಲ್ಲಿ ಭಿತ್ತಿಪತ್ರ ಅಳವಡಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಔಷಧ ನಿಯಂತ್ರಕರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಲಹಾ ಚೀಟಿ ಇಲ್ಲದೇ ಔಷಧ ವಿತರಿಸುವ ಶಾಪ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಮಾದಕ ವಸ್ತುಗಳ ಸಂಗ್ರಹ, ಬಳಕೆ, ಸರಬರಾಜು ಕುರಿತಂತೆ ಮಾಹಿತಿ ನೀಡಲು ರಚಿಸಿರುವ ಡ್ರಗ್ ಫ್ರೀ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಬಳಕೆ ಮತ್ತು ಅದರ ಉಪಯೋಗದ ಕುರಿತಂತೆ ಸಾರ್ವಜನಿರಕಲ್ಲಿ ಹೆಚ್ಚಿನ ಅರಿವು ಮೂಡಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎನ್ ಕಾರ್ಡ್ ಸಮಿತಿಯ ಎಲ್ಲಾ ಸದಸ್ಯರು ಪ್ರತೀ ತಿಂಗಳು ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಕೈಗೊಂಡ ತಪಾಸಣೆಯ ಕುರಿತ ಪ್ರಗತಿ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವಂತೆ ನಿರ್ದೇಶಿಸಿದರು.

ಜಿಲ್ಲೆಯಲ್ಲಿ 2026ರಲ್ಲಿ ಇದುವರೆಗೆ ಮಾದಕ ವಸ್ತು ಸರಬರಾಜಿನ 8 ಪ್ರಕರಣಗಳಲ್ಲಿ 14 ಮಂದಿಯನ್ನು ಬಂಧಿಸಿ, ರೂ. 1,49,500 ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದು, ಮಾದಕ ವಸ್ತು ಸೇವನೆಯ 97 ಪ್ರಕರಣಗಳಲ್ಲಿ 112 ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದರು.

ಸಭೆಯಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಬಂದರು, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Share