ಹೊನ್ನಾವ; ವಿದ್ಯುತ್ ಅದಾಲತ್, ಗ್ರಾಹಕರ ಸಂವಾದ ಸಭೆ
ಹೊನ್ನಾವರ: ಹೊನ್ನಾವರ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳ ಪರಿಹಾರಕ್ಕಾಗಿ ಜುಲೈ 18ರಂದು ಹೊನ್ನಾವರ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್ ಅದಾಲತ್ ಹಾಗೂ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಬೆಳಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30 ಗಂಟೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ. ವಿದ್ಯುತ್ಗೆ ಸಂಬಂಧಿಸಿದ ಸಮಸ್ಯೆಗಳಿರುವ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳುವಂತೆ ಹೊನ್ನಾವರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಿಎಂಎಸ್; ಸದಸ್ಯರು–ಹಿತೈಷಿಗಳಿಗೆ ಅಭಿನಂದನಾ ಸಭೆ
ಯಲ್ಲಾಪುರ: ತಾಲೂಕಾ ಮಾರ್ಕೆಟಿಂಗ್ ಸೊಸೈಟಿ (ಟಿಎಂಎಸ್) ಯಲ್ಲಾಪುರದ ಚುನಾವಣೆಯಲ್ಲಿ ನಾರಾಯಣ ಭಟ್ಟ ಅಗ್ಲಾಶಿಕುಂಬ್ರಿ ನೇತೃತ್ವದ ತಂಡದ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ, ಸದಸ್ಯರು ಹಾಗೂ ಹಿತೈಷಿಗಳಿಗೆ ಅಭಿನಂದನಾ ಸಭೆಯನ್ನು ಜುಲೈ 18ರಂದು ಶನಿವಾರ ಮಧ್ಯಾಹ್ನ 3.30ಕ್ಕೆ ಟಿಎಂಎಸ್ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಕೆನರಾ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಟಿಎಂಎಸ್ ಅಧ್ಯಕ್ಷ ನಾರಾಯಣ ಭಟ್ಟ ಅಗ್ಲಾಶಿಕುಂಬ್ರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಪ್ರಣವ ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಆರ್.ವಿ. ಹೆಗಡೆ, ಟಿಎಂಎಸ್ ಹಿರಿಯ ಸದಸ್ಯ ನಾರಾಯಣ ಜಡ್ಡಿಪಾಲ ಕುಂಬ್ರಿತೋಟ ಹಾಗೂ ಹಾಸಣಗಿ ಸೇವಾ ಸಹಕಾರಿ ಸಂಘದ ನಿರ್ದೇಶಕ ರಾಘವೇಂದ್ರ ಭಟ್ಟ ಹಾಸಣಗಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಟಿಎಂಎಸ್ ಸದಸ್ಯರು, ಅಭಿಮಾನಿಗಳು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
SIR; ಮಹಿಳೆಯರಿಗೆ ರಂಗೋಲಿ ಸ್ಪರ್ಧೆ
ಕಾರವಾರ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಕಾರವಾರ ತಾಲೂಕಿನ ಸ್ವಸಹಾಯ ಸಂಘಗಳ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಜುಲೈ 18ರಂದು ಬೆಳಿಗ್ಗೆ 11 ಗಂಟೆಗೆ ಕಾರವಾರದ ಕಾಜುಭಾಗದಲ್ಲಿರುವ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಸ್ಪರ್ಧೆ ನಡೆಯಲಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.