ಉಜಿರೆ: ತಿಥಿ ಅಡುಗೆಗಾಗಿ ನದಿಯಲ್ಲಿ ಆಮೆಗಳನ್ನು ಬೇಟೆಯಾಡುತ್ತಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿ, ನಾಲ್ಕು ಆಮೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮದ ಪೆರಡಾಲು ನಿವಾಸಿ ಮಣಿಕಂಠ, ಮೂಲ್ಕಿ ತಾಲ್ಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ, ಮೂಡುಬಿದಿರೆ ತಾಲ್ಲೂಕಿನ ಶಿರ್ತಾಡಿ ಗ್ರಾಮದ ವಿಘ್ನೇಶ್ ಹಾಗೂ ಬೆಳ್ತಂಗಡಿ ತಾಲ್ಲೂಕಿನ ಬಡಗಕಾರಂದೂರು ನಿವಾಸಿ ಪ್ರಶಾಂತ್ ಎಂದು ಗುರುತಿಸಲಾಗಿದೆ.
ಸಂಬಂಧಿಕರ ಮನೆಗೆ ಅಜ್ಜಿಯ ಉತ್ತರ ಕ್ರಿಯೆಗಾಗಿ ಫೆಬ್ರವರಿ 13ರಂದು ಉಜಿರೆಗೆ ಬಂದಿದ್ದ ಆರೋಪಿಗಳು, ಅಜ್ಜಿಗೆ ಇಷ್ಟವಾಗಿದ್ದ ಖಾದ್ಯ ತಯಾರಿಸಲು ಶನಿವಾರ ಸಂಜೆ ಬೆಳ್ತಂಗಡಿ ತಾಲೂಕಿನ ಸೋಮಾವತಿ ನದಿಯಲ್ಲಿ ಆಮೆಗಳನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಪಿಎಸ್ಐ ಆನಂದ್ ಎಂ. ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.