ಕಾರವಾರ: ಆತ್ಮಸ್ಥೈರ್ಯ, ಶಿಸ್ತು ಹಾಗೂ ಸತತ ಪ್ರಯತ್ನ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಪ್ರಾಚಾರ್ಯರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಯುವಕರು ವಿವಿಧ ದುಶ್ಚಟಗಳ ಆಕರ್ಷಣೆಗೆ ಒಳಗಾಗುತ್ತಿರುವ ಸಂದರ್ಭದಲ್ಲಿಯೂ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಶ್ಲಾಘನೀಯ. ಉತ್ತಮ ಮಾರ್ಗದರ್ಶನ ನೀಡಿದ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಸಾಧನೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ಹೆಸ್ಕಾಂ, ಸಾರಿಗೆ ಹಾಗೂ ಪೊಲೀಸ್ ಇಲಾಖೆಗಳು ಸಹಕಾರ ನೀಡಿವೆ. ವಿದ್ಯಾರ್ಥಿಗಳು ಮುಂದೆಯೂ ಇನ್ನಷ್ಟು ಎತ್ತರಕ್ಕೆ ಬೆಳೆಯುವ ಮೂಲಕ ಜಿಲ್ಲೆ ಹಾಗೂ ಪೋಷಕರಿಗೆ ಕೀರ್ತಿ ತರುವಂತಾಗಲಿ ಎಂದು ಆಶಿಸಿದರು.
ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಸಾಧನೆಗೆ ಪೋಷಕರು ಮತ್ತು ಶಿಕ್ಷಕರ ಪ್ರೋತ್ಸಾಹವೇ ಕಾರಣ ಎಂದು ಹೇಳಿ, ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ, ವಾಣಿಜ್ಯ ವಿಭಾಗದಲ್ಲಿ ಸಾಧನೆ ಮಾಡಿದ ಚಿನ್ಮಯಿ ಮಂಜುನಾಥ್ ಶೆಟ್ಟಿ, ಪ್ರಣವ್ ಎನ್ ಭಟ್, ಸಂಜನಾ ನಾಗಪ್ಪ ನಾಯ್ಕ, ಅಕ್ಷಾ ಶ್ರೀನ್, ಅರ್ಪಿತಾ ಎಸ್ ಹೆಗಡೆ, ವಿಜ್ಞಾನ ವಿಭಾಗದಲ್ಲಿ ಸಾಧನೆ ಮಾಡಿದ ಚೈತನ್ಯ ಜಿ ಹೆಗಡೆ, ಭೂಮಿಕಾ ಡಿ ನಾಯಕ, ಮೈಮುನಾ ಅಜೈಬ್, ತೇಜಸ್ ರವಿ ನಾಯಕ್, ರಘು ಶರಶ್ಚಂದ್ರ ಹೆಗಡೆ, ಶಿಫಾ ಅನಮ್, ಲಯಬಾ ಪರ್ವೀನ್ ಮೊಹಮ್ಮದ್ ಇಬ್ರಾಹಿಂ , ಜಾಹ್ನವಿ ಮಾಸ್ತಿ ಗೌಡ, ಸಾಕ್ಷಿ ವಿನೋದ್ ನಾಯ್ಕ ಅವರನ್ನು ಅಭಿನಂದಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ, ಪ್ರಾಚಾರ್ಯರ ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್ ರಾಮನಾಥನ್, ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರವೀಣ್ ನಾಯಕ ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.