ಕಾರವಾರ: ಸಾರ್ವಜನಿಕ ಸುವ್ಯವಸ್ಥೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆ, ಬೇಸ್ ಬೂಸ್ಟರ್ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬಲ್ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ.
ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮಗಳು) 2000 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್), 2023ರ ಕಲಂ 163ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಈ ಆದೇಶ ಹೊರಡಿಸಲಾಗಿದೆ.
ಇದರ ಜೊತೆಗೆ ವಸತಿ ಪ್ರದೇಶಗಳು, ಸೈಲೆಂಟ್ ಝೋನ್ಗಳು, ಅಂದರೆ ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳ 100 ಮೀಟರ್ ವ್ಯಾಪ್ತಿಯ ಪ್ರದೇಶಗಳು, ಇಳಿಜಾರು ರಸ್ತೆಗಳು, ಸಂಚಾರ ದಟ್ಟಣೆ ಇರುವ ಪ್ರದೇಶಗಳು ಹಾಗೂ ಸಮುದಾಯ ಸೂಕ್ಷ್ಮ ಪ್ರದೇಶಗಳಲ್ಲಿ ಡಿಜೆ ಮತ್ತು ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅಲ್ಲದೆ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಡಿಜೆ ಸೇರಿದಂತೆ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಗೆ ಸಂಪೂರ್ಣ ನಿರ್ಬಂಧವಿದೆ.
ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಯಾವುದೇ ಆಚರಣೆಯನ್ನು ಆಯೋಜಿಸುವವರು ಅತೀ ಅವಶ್ಯಕತೆಯಿದ್ದಲ್ಲಿ ಮಾತ್ರ ಪೊಲೀಸ್ ಇಲಾಖೆಯಿಂದ ಪೂರ್ವ ಲಿಖಿತ ಅನುಮತಿ ಪಡೆದು, ಷರತ್ತುಬದ್ಧ ಹಾಗೂ ಮಿತ ಶಬ್ದ ವ್ಯವಸ್ಥೆಯನ್ನು ಬಳಸಬಹುದಾಗಿದೆ. ಶಬ್ದ ಮಾಲಿನ್ಯ ನಿಯಮಗಳನ್ನು ಪಾಲಿಸುವ ಕುರಿತು ಆಯೋಜಕರು ಲಿಖಿತ ಮುಚ್ಚಳಿಕೆ ಪತ್ರ ನೀಡುವುದು ಕಡ್ಡಾಯವಾಗಿದೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾರ್ಯಕ್ರಮದ ಆಯೋಜಕರೇ ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ತಿಳಿಸಿದ್ದಾರೆ.