ಕಾರವಾರ/ಕುಮಟಾ: ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ, ಸಾರ್ವಜನಿಕರ ನೀರಿನ ಸಮಸ್ಯೆ, ದೂರುಗಳಿಗೆ ತಕ್ಷಣವೇ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಸೂಚನೆ ನೀಡಿದರು.
ಅವರು ಮಂಗಳವಾರ ಕುಮಟಾ ಉಪ ವಿಭಾಗಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಈ ಬಾರಿ ಕುಡಿಯುವ ನೀರಿನ ಅಭಾವದಿಂದ ಜನರು ತೊಂದರೆಗೀಡಾಗಿದ್ದು, ಕುಡಿಯುವ ನೀರಿನ ಮೂಲಗಳು ಇಲ್ಲದ ಕಡೆ ಟ್ಯಾಂಕರ್ ಮೂಲಕ ನೀರು ಒದಗಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕಿಗೆ ಟಾಸ್ಕ್ ಪೋರ್ಸ್ ಅಡಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ರೂ.25 ಲಕ್ಷ ಅನುದಾನ ಹಂಚಿಕೆಯಗಿದ್ದು, ಜಿಲ್ಲೆಗೆ ಇನ್ನೂ 3 ಕೋಟಿ ರೂ ಹೆಚ್ಚುವರಿ ಅನುದಾನ ಬರಲಿದೆ. ಕುಡಿಯುವ ನೀರಿನ ಸಮಸ್ಯೆ ಗೆ ಯಾವುದೇ ಅನುದಾನದ ಕೊರತೆಯಿಲ್ಲ, ಇನ್ನೂ ಹೆಚ್ಚುವರಿ ಅನುದಾನದ ಅಗತ್ಯವಿದ್ದರೂ ಸರ್ಕಾರ ದಿಂದ ಬಿಡುಗಡೆ ಮಾಡಿಸಲಾಗುವದು. ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗೆ ನೀರಿನ ತೊಂದರೆ ಆಗದಂತೆ ಎಚ್ಚರ ವಹಿಸಿ ಎಂದರು.
ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಶಿರಸಿ ತಾಲೂಕಿನ 14 ಗ್ರಾಮ ಪಂಚಾಯತ್ ಮತ್ತು ಸಿದ್ದಾಪುರ ತಾಲೂಕಿನ 19 ಗ್ರಾಮ ಪಂಚಾಯತಗಳಲ್ಲಿ ಕುಡಿಯುವ ನೀರಿನ ಅಭಾವವಾಗಿದೆ. ಬಹುತೇಕ ಈ ಭಾಗದ ಕೆರೆಗಳು ಬತ್ತಿರುವುದರಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜೆಜೆಎಂ ಮೂಲಕವೂ ನೀರು ಸರಬರಾಜು ಆಗುತ್ತಿಲ್ಲ ಎಂದರು.
ಕಾರವಾರ ಭಟ್ಕಳದವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರoಭಗೊಂಡು 15 ವರ್ಷಗಳೇ ಆದರೂ ಮುಕ್ತಾಯವಾಗದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ ಸಚಿವರು, ಕಾಮಗಾರಿಯ ಮುಕ್ತಾಯಕ್ಕೆ ಅನಗತ್ಯ ವಿಳಂಬ ಮಾಡದೇ ಬಾಕಿ ಇರುವ ಎಲ್ಲಾ ಪ್ರಪೋಸಲ್ಗಳನ್ನು ಒಂದೇ ಬಾರಿ ಸಲ್ಲಿಸಿ ಅಗತ್ಯ ಅನುಮೋದನೆ ಪಡೆದು ಕಾಮಗಾರಿಗೆ ವೇಗ ನೀಡುವಂತೆ ನಿರ್ದೇಶನ ನೀಡಿದರು.
ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳ ಪಕ್ಕದಲ್ಲಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮೆಸ್ಕಾಂ ವತಿಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು, ವಿದ್ಯುತ್ ಕಂಬಗಳ ದಾಸ್ಥಾನು ಇರುವಂತೆ ನೋಡಿಕೊಳ್ಳಬೇಕು. ಅಂಗನವಾಡಿ, ಶಾಲೆ ಸೇರಿದಂತೆ ಸಾರ್ವಜನಿಕ ಸ್ಥಳದಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಮತ್ತು ಯಾವುದೇ ಅನಾಹುತ ಸಂಭವಿಸಿದಲ್ಲಿ 24 ಗಂಟೆಯ ಒಳಗೆ ಪರಿಹಾರ ವಿತರಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕ ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ, ಸಾಜೀದ್ ಮುಲ್ಲಾ, ಉಪ ವಿಭಾಗಾಧಿಕಾರಿ
ಶ್ರವಣ್ ಕುಮಾರ್ ಸೇರಿದಂತೆ ಎಲ್ಲಾ ತಹಸೀಲ್ದಾರರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.