ಉತ್ತರ ಕನ್ನಡಕ್ಕೆ ₹62.56 ಕೋಟಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳಿಗೆ ಮುಂದಿನ 2-3 ದಿನಗಳಲ್ಲಿ ಒಟ್ಟು ₹62.56 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ನಾಯ್ಕ ತಿಳಿಸಿದ್ದಾರೆ.
ಕಾರವಾರದಲ್ಲಿ ಗುರುವಾರ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 3,12,818 ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಒಟ್ಟು ₹62,56,36,000 ಜಮೆಯಾಗಲಿದೆ ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯಲ್ಲಿ ಒಂದೇ ಫಲಾನುಭವಿ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ 26,986 ಫಲಾನುಭವಿಗಳ ಖಾತೆಗಳನ್ನು ಮರುಪರಿಶೀಲನೆ ಮಾಡಲಾಗಿದೆ.
ಈ ಪರಿಶೀಲನೆಯಲ್ಲಿ ಯಾವುದೇ ಫಲಾನುಭವಿಯ ಖಾತೆಗೆ ಒಂದೇ ತಿಂಗಳಲ್ಲಿ ಎರಡು ಬಾರಿ ಹಣ ಜಮೆಯಾಗಿರುವುದು ಪತ್ತೆಯಾಗಿಲ್ಲ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಗೃಹಜ್ಯೋತಿ ಯೋಜನೆ ಕುರಿತು ಮಾತನಾಡಿದ ಅವರು, ಫಲಾನುಭವಿಗಳ ಅರ್ಹತೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ವೇಳೆ ಫಲಾನುಭವಿಗಳು ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಸೇರಿದಂತೆ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮರುಪರಿಶೀಲನೆಗೆ ಬರುವ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ನಿರಾಕರಿಸಿದರೆ ಗೃಹಜ್ಯೋತಿ ಯೋಜನೆಯ ಸೌಲಭ್ಯ ಮುಂದುವರಿಯುವುದು ಕಷ್ಟವಾಗಬಹುದು ಎಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಮಳೆಯ ಕಾರಣದಿಂದ ಗೃಹಜ್ಯೋತಿ ಪರಿಶೀಲನಾ ಕಾರ್ಯ ಕೆಲವೆಡೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿ ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಸತೀಶ್ ನಾಯ್ಕ ತಿಳಿಸಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.