‘ನ್ಯಾಯ ಮನೆಬಾಗಿಲಿಗೆ ತಲುಪಬೇಕು’ ಎಂಬ ಆಶಯಕ್ಕೂ ಧಾರವಾಡ ಪೀಠವೇ ಹೆಚ್ಚು ಸೂಕ್ತ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನ್ಯಾಯಾಲಯಗಳ ಅಧಿಕಾರ ವ್ಯಾಪ್ತಿಯನ್ನು ಪ್ರಸ್ತಾಪಿತ ಮಂಗಳೂರು ಉಚ್ಚ ನ್ಯಾಯಾಲಯದ ಪೀಠಕ್ಕೆ ಸೇರಿಸುವ ಪ್ರಸ್ತಾವನೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ 18 ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆ ಧಾರವಾಡ ಉಚ್ಚ ನ್ಯಾಯಾಲಯ ಪೀಠದ ವ್ಯಾಪ್ತಿಯಲ್ಲಿದ್ದು, ಮುಂದೆಯೂ ಧಾರವಾಡ ಪೀಠದಲ್ಲೇ ಮುಂದುವರಿಯಬೇಕು ಎಂಬುದು ಜಿಲ್ಲೆಯ ಸಾರ್ವಜನಿಕರು ಹಾಗೂ ವಕೀಲರ ನ್ಯಾಯಯುತ ಮತ್ತು ಒಮ್ಮತದ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡದ ಪ್ರಾದೇಶಿಕ ಹಿತದೃಷ್ಟಿಯಿಂದ ಜಿಲ್ಲೆಯನ್ನು ಧಾರವಾಡ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸುವಂತೆ ಮುಖ್ಯಮಂತ್ರಿ ಹಾಗೂ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೆ ಈಗಾಗಲೇ ಪತ್ರದ ಮೂಲಕ ಮನವಿ ಸಲ್ಲಿಸಿರುವುದಾಗಿ ಸಂಸದ ಕಾಗೇರಿ ಹೇಳಿದ್ದಾರೆ.
ಭೌಗೋಳಿಕ ಅಂತರ ಹಾಗೂ ಸಾರಿಗೆ ಸೌಲಭ್ಯದ ದೃಷ್ಟಿಯಿಂದ ಕಾರವಾರ, ಹಳಿಯಾಳ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ಜನರಿಗೆ ಮಂಗಳೂರಿಗಿಂತ ಧಾರವಾಡ ತಲುಪುವುದು ಸುಲಭ ಮತ್ತು ಸಮಯ ಉಳಿತಾಯವಾಗಲಿದೆ. ‘ನ್ಯಾಯ ಮನೆಬಾಗಿಲಿಗೆ ತಲುಪಬೇಕು’ ಎಂಬ ಆಶಯಕ್ಕೂ ಧಾರವಾಡ ಪೀಠವೇ ಹೆಚ್ಚು ಸೂಕ್ತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಹೀಗಾಗಿ ಜನಸಾಮಾನ್ಯರು ಹಾಗೂ ಕಕ್ಷಿದಾರರ ಹಿತವನ್ನು ಗಮನದಲ್ಲಿಟ್ಟುಕೊಂಡು ಉತ್ತರ ಕನ್ನಡ ಜಿಲ್ಲೆಯನ್ನು ಯಾವುದೇ ಕಾರಣಕ್ಕೂ ಪ್ರಸ್ತಾಪಿತ ಮಂಗಳೂರು ಪೀಠದ ವ್ಯಾಪ್ತಿಗೆ ಸೇರಿಸಬಾರದು. ಜಿಲ್ಲೆಯನ್ನು ಧಾರವಾಡ ಉಚ್ಚ ನ್ಯಾಯಾಲಯದ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸುವಂತೆ ಮುಖ್ಯಮಂತ್ರಿ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೂಕ್ತ ನಿರ್ದೇಶನ ನೀಡಬೇಕು ಎಂದು ಕಾಗೇರಿ ಆಗ್ರಹಿಸಿದ್ದಾರೆ.