ಸಿದ್ದಾಪುರ: ಅರಣ್ಯ ಹಕ್ಕು ಕಾಯ್ದೆಯಡಿ ತಿರಸ್ಕೃತಗೊಂಡ ಅರ್ಜಿದಾರರ ಸಾಗುವಳಿ ಜಮೀನುಗಳಿಗೆ ಸಂಬಂಧಿಸಿದ ಮಹಜರ್ ಪ್ರಕ್ರಿಯೆಯಲ್ಲಿ ನ್ಯೂನತೆಗಳಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಾಜಗೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯವಾಸಿಗಳು ಇಂದು (ಜೂ. 9) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರನ್ನು ಭೇಟಿ ಮಾಡಿ ಚರ್ಚಿಸಲು ನಿರ್ಧರಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಸಂಚಾಲಕ ಮಹಾಬಲೇಶ್ವರ ನಾಯ್ಕ ಬೇಡ್ಕಣಿ, ಮಹಜರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಬಗ್ಗೆ ಹೋರಾಟಗಾರರ ವೇದಿಕೆ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದ್ದರೂ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅದೇ ಪ್ರಕ್ರಿಯೆ ಮುಂದುವರಿಯುತ್ತಿರುವುದು ಅರಣ್ಯವಾಸಿಗಳಲ್ಲಿ ಆತಂಕ ಮೂಡಿಸಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನದಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ನೊಡಲ್ ಅಧಿಕಾರಿಯಾಗಿರುವ ಹಿನ್ನೆಲೆಯಲ್ಲಿ, ಇಂದು ಬೆಳಿಗ್ಗೆ 10.30ಕ್ಕೆ ವಾಜಗೋಡ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಕೂಡ ಉಪಸ್ಥಿತರಿರುವುದಾಗಿ ತಿಳಿಸಲಾಗಿದೆ.
ಮಹಜರ್ ಪ್ರಕ್ರಿಯೆ ಅಪೂರ್ಣ ಹಾಗೂ ನ್ಯೂನತೆಗಳಿಂದ ಕೂಡಿದೆ ಎಂದು ಆರೋಪಿಸಿರುವ ವೇದಿಕೆ, ಸಂಬಂಧಿತ ಅರಣ್ಯವಾಸಿಗಳು ಖುದ್ದಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿ ತಮ್ಮ ಸಮಸ್ಯೆಗಳು ಮತ್ತು ಆಕ್ಷೇಪಣೆಗಳನ್ನು ಪಿಡಿಒ ಅವರ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದೆ.