ಸಿದ್ದಾಪುರ: ತಾಲೂಕಿನ ವಾಜಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಕೊಠಡಿಗಳ ಉದ್ಘಾಟನೆ ಹಿನ್ನೆಲೆಯಲ್ಲಿ ಗಣಹೋಮ, ವಾಸ್ತುಶಾಂತಿ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು.
ಕಾರ್ಯಕ್ರಮದಲ್ಲಿ ಅನಂತ್ ಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತ್ ಮೂರ್ತಿ ಹೆಗಡೆ ಭಾಗವಹಿಸಿ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಇತ್ತೀಚೆಗೆ ಶಾಲೆಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಕೊಡುಗೆಯಾಗಿ ನೀಡಿದ್ದಕ್ಕಾಗಿ ಇದೇ ಸಂದರ್ಭದಲ್ಲಿ ಎಸ್ಡಿಎಂಸಿ ಹಾಗೂ ಗ್ರಾಮಸ್ಥರು ಅವರನ್ನು ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅನಂತ್ ಮೂರ್ತಿ ಹೆಗಡೆ, ಮಕ್ಕಳು ಉತ್ತಮ ವಾತಾವರಣದಲ್ಲಿ ಗುಣಮಟ್ಟದ ಆಹಾರ ಹಾಗೂ ಶುದ್ಧ ನೀರು ಸೇವಿಸುವ ಮೂಲಕ ಆರೋಗ್ಯವಂತರಾಗಿ ಬೆಳೆಯಬೇಕು. ದೇಶದ ಭವಿಷ್ಯವಾಗಿರುವ ಮಕ್ಕಳು ಸದೃಢ ದೇಹ ಮತ್ತು ಉತ್ತಮ ಆರೋಗ್ಯ ಹೊಂದಿದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ. ಇದೇ ಉದ್ದೇಶದಿಂದ ಈಗಾಗಲೇ 150ಕ್ಕೂ ಹೆಚ್ಚು ಶಾಲೆಗಳಿಗೆ ನೀರಿನ ಫಿಲ್ಟರ್ಗಳನ್ನು ವಿತರಿಸಿದ್ದೇವೆ. ಶಾಲೆಗಳಷ್ಟೇ ಅಲ್ಲದೆ ಸಮಾಜದ ವಿವಿಧ ಕ್ಷೇತ್ರಗಳಿಗೂ ಸೇವಾ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿದ್ದೇವೆ ಎಂದರು.
ಅಲ್ಲದೆ, ನಟ ಪುನೀತ್ ರಾಜ್ಕುಮಾರ್ ಅವರ ಸೇವಾ ಮನೋಭಾವವನ್ನು ಸ್ಮರಿಸಿದ ಅವರು, ಜೀವನದಲ್ಲಿ ಸಾಧ್ಯವಾದಷ್ಟು ಜನರಿಗೆ ಸಹಾಯ ಮಾಡುವ ಮೂಲಕ ಅರ್ಥಪೂರ್ಣ ಬದುಕು ನಡೆಸಬೇಕು ಎಂಬ ಸಂದೇಶವನ್ನು ಪುನೀತ್ ರಾಜ್ಕುಮಾರ್ ನೀಡಿದ್ದಾರೆ. ಅವರ ಆದರ್ಶವನ್ನು ಎಲ್ಲರೂ ಅನುಸರಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲೆಯ ಶಿಕ್ಷಕರು, ಪಾಲಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.