ಕಾರವಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಮಾಜಿ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ್ ಆಗ್ರಹಿಸಿದರು.
ಕಾರವಾರದಲ್ಲಿ ಬಿಜೆಪಿ ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಒಬಿಸಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಸರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎಸ್ಸಿ–ಎಸ್ಟಿ ನಿಗಮಗಳಿಗೆ ಸೇರಿದ ಬಹುಕೋಟಿ ರೂಪಾಯಿ ಹಣದ ದುರ್ಬಳಕೆ ಪ್ರಕರಣವನ್ನು ಖಂಡಿಸಿದ ಅವರು, ಹಗರಣದ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಬಲ ತುಂಬಬೇಕು ಎಂದರು.
ಸತ್ಯಾಗ್ರಹಕ್ಕೂ ಮುನ್ನ ರೂಪಾಲಿ ನಾಯ್ಕ್ ಅವರು ಭಾರತ ಮಾತೆ ಹಾಗೂ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಣ ದುರ್ಬಳಕೆ ಪ್ರಕರಣದ ತನಿಖೆ ನಡೆಯುತ್ತಿರುವ ಸಂದರ್ಭದಲ್ಲೂ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಸತ್ಯಾಗ್ರಹದಲ್ಲಿ ರಾಜ್ಯ ಒಬಿಸಿ ಮೋರ್ಚಾದ ರಾಜೇಂದ್ರ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನಾಯ್ಕ, ಪ್ರಭಾರಿಗಳಾದ ಗಜಾನನ ಗುನ್ಗಾ ಹಾಗೂ ರಾಜು ಭಂಡಾರಿ, ಪಕ್ಷದ ವಕ್ತಾರ ಜಗದೀಶ್ ನಾಯಕ ಮೊಗಟಾ, ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರ್ಡೇಕರ್, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ, ಅಂಕೋಲಾ ಮಂಡಲದ ಸಂಜಯ್ ನಾಯ್ಕ್, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ರಾಜ್ಯ ಪ್ರಕೋಷ್ಠದ ಸುನಿಲ್ ಸೋನಿ, ಜಿಲ್ಲಾ ಉಪಾಧ್ಯಕ್ಷರಾದ ಸಂಜಯ್ ಸಾಲುನಕೆ, ನಿತ್ಯಾನಂದ ಗಾಂವ್ಕರ್, ರೇಖಾ ಹೆಗ್ಡೆ, ನೈನಾ ನಿಲಾವರ್ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ವಿವಿಧ ಜವಾಬ್ದಾರಿ ಹೊಂದಿರುವ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.