ಯಲ್ಲಾಪುರ: ಕಳೆದ ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಯಲ್ಲಾಪುರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಯಲ್ಲಾಪುರ ತಾಲೂಕಿನ ಬಿಳಕಿ ಗ್ರಾಮದ ಜಡಗಿನಕೊಪ್ಪ ನಿವಾಸಿ ಪ್ರಕಾಶ್ ತಂದೆ ಕೃಷ್ಣಾ ಸಿದ್ದಿ (26) ಬಂಧಿತ ಆರೋಪಿ.
ಆರೋಪಿಯ ವಿರುದ್ಧ ಯಲ್ಲಾಪುರ ಜೆಎಂಎಫ್ಸಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಖಚಿತ ಮಾಹಿತಿ ಮೇರೆಗೆ ಜುಲೈ 2ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಪ್ರಕಾಶ್ ವಿರುದ್ಧ ಯಲ್ಲಾಪುರ ಮತ್ತು ಮುಂಡಗೋಡ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿರುವ ಇನ್ನೂ ನಾಲ್ಕು ಪ್ರಕರಣಗಳಲ್ಲಿಯೂ ಜಾಮೀನು ರಹಿತ ವಾರೆಂಟ್ ಜಾರಿಯಲ್ಲಿತ್ತು. ಅವುಗಳಲ್ಲಿ ಯಲ್ಲಾಪುರ ಠಾಣೆಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಕಳವು ಪ್ರಕರಣಗಳು, ಮುಂಡಗೋಡ ಠಾಣೆಯ ಎರಡು ಕಳವು ಪ್ರಕರಣಗಳು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧೀಕ್ಷಕ ದೀಪನ್ ಎನ್. (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ, ಯಲ್ಲಾಪುರ ಪೊಲೀಸ್ ಠಾಣೆ ಪಿಐ ರಮೇಶ್ ಹಾನಾಪುರ ನೇತೃತ್ವದಲ್ಲಿ ಪಿಎಸ್ಐಗಳಾದ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬಳೆ ಹಾಗೂ ಸಿಬ್ಬಂದಿಗಳಾದ ಗೋಪಾಲ್ ಚವ್ಹಾಣ, ಸಂತೋಷ ಬಾಳೇರ, ಬಸವರಾಜ ಡಿ.ಕೆ., ಪರಶುರಾಮ ದೊಡ್ಡಮನಿ, ಮಾಹಂತೇಶ ಕಡಪಟ್ಟಿ, ಹನುಮಂತಪ್ಪ ಕೋಲಾರ, ಮಹೇಶ ಸಾವಸಂಗಿ, ವಿಶ್ವನಾಥ ಜಾಯನಗೌಡರ್ ಮತ್ತು ಮಹಿಳಾ ಪಿಸಿಐ ರೇಖಾ ಎಂ.ಎಸ್. ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿದ್ದಾರೆ.