ಶಿರಸಿ: ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದ ವಾರಂಟ್ ಆರೋಪಿ ನ್ಯಾಯಾಲಯದ ಆವರಣದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ಶಿರಸಿಯಲ್ಲಿ ನಡೆದಿದ್ದು, ಕೆಲವೇ ಹೊತ್ತಿನಲ್ಲಿ ಪೊಲೀಸರು ಆರೋಪಿಯನ್ನು ಮತ್ತೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬನವಾಸಿ ಪೊಲೀಸ್ ಠಾಣೆಯ ಸಿಬ್ಬಂದಿ ಅಬ್ದುಲ್ಸಯೀದ ಹುಸೇನ್ ಸೈಯ್ಯದ ನೀಡಿದ ದೂರಿನ ಪ್ರಕಾರ, ವಾರಂಟ್ ಆರೋಪಿ ದಾಸನಕೊಪ್ಪದ ಸ್ವಾಮೇಲ್ @ ಸುನೀಲ್ (24) ಎಂಬಾತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ನ್ಯಾಯಾಲಯವು ಆರೋಪಿಗೆ ಜುಲೈ 14ರಿಂದ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ, ವೈದ್ಯಕೀಯ ಪರೀಕ್ಷೆ ಮುಗಿಸಿ ಮತ್ತೆ ನ್ಯಾಯಾಲಯಕ್ಕೆ ಕರೆತರಲಾಗಿತ್ತು.ಈ ವೇಳೆ ನ್ಯಾಯಾಂಗ ಬಂಧನದ ವಿಷಯ ತಿಳಿದ ಆರೋಪಿ, ತಪ್ಪಿಸಿಕೊಳ್ಳುವ ಉದ್ದೇಶದಿಂದ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನು ತಳ್ಳಿ ಕೆಳಗೆ ಬೀಳಿಸಿ, ಕಾಲಿನಿಂದ ಒದ್ದು ಪರಾರಿಯಾಗಲು ಯತ್ನಿಸಿದ್ದಾನೆ.
ಆರೋಪಿಯನ್ನು ಬೆನ್ನಟ್ಟಿದ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೂ ಹಲ್ಲೆ ನಡೆಸಿ ಅಲ್ಲಿಂದ ಓಡಿ ಹೋಗಿದ್ದಾನೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೋಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ, ತೋಟಗಾರ್ಸ್ ಬಾಯ್ಸ್ ಹಾಸ್ಟೆಲ್ ಸಮೀಪದ ಗಿಡಗಂಟಿಯಲ್ಲಿ ಅವಿತು ಕುಳಿತಿದ್ದ ಆರೋಪಿಯನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ.
ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಕಾನೂನುಬದ್ಧ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಡಿ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.