ಶಿರಸಿ: ವಿಶ್ವ ಪರಿಸರ ದಿನದ ಅಂಗವಾಗಿ ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಜೂನ್ 5ರಂದು ಸೋಂದಾದ ಶಾಲ್ಮಲಾ ನದೀ ತೀರದಲ್ಲಿ ಬೃಹತ್ ವೃಕ್ಷಾರೋಪಣ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಸೋಂದಾ ಯಾತ್ರಿ ನಿವಾಸದ ಸಮೀಪ ಮಧ್ಯಾಹ್ನ 4 ಗಂಟೆಗೆ ನಡೆಯುವ ಕಾರ್ಯಕ್ರಮ ಶ್ರೀಮಠದ ಪೂಜ್ಯ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಪಂಚಾಯತ್ಗಳು, ಶಿಕ್ಷಣ ಸಂಸ್ಥೆಗಳು, ಮಾತೃ ಮಂಡಳಿಗಳು, ರೈತರು, ವನವಾಸಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಮನವಿ ಮಾಡಿದೆ.
ಇದರ ಜೊತೆಗೆ ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳ ವಿವಿಧ ನದೀತೀರ ಪ್ರದೇಶಗಳಲ್ಲಿ ಗಿಡ ನೆಡುವ ಜಾಗೃತಿ ಅಭಿಯಾನವನ್ನು ವಿಸ್ತರಿಸುವ ಯೋಜನೆಯನ್ನೂ ಸಮಿತಿ ರೂಪಿಸಿದೆ.
ಜೂನ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂಕಲ್ಪಕ್ಕೆ ಕೈಜೋಡಿಸುವಂತೆ ಪೂಜ್ಯ ಸ್ವರ್ಣವಲ್ಲೀ ಶ್ರೀಗಳು ಕರೆ ನೀಡಿದ್ದಾರೆ ಎಂದು ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.