ಯಲ್ಲಾಪುರ: ಪಶ್ಚಿಮ ಬಂಗಾಳ, ಪುದುಚೇರಿ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಮಂಡಲದ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.
ಈ ವೇಳೆ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಹಾಗೂ ಪ್ರಮೋದ ಹೆಗಡೆ ಮಾತನಾಡಿ, ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿರುವ ಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತದ ಪ್ರತಿಫಲವಾಗಿದೆ ಎಂದು ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದಿಂದ ಬೇಸತ್ತ ಜನರು ಬಿಜೆಪಿ ಬೆಂಬಲಿಸಿದ್ದಾರೆ. ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ್ದು, ಮಮತಾ ಬ್ಯಾನರ್ಜಿ ಆಡಳಿತಕ್ಕೆ ಅಂತ್ಯ ಹಾಡಿದೆ ಎಂದು ಅಭಿಪ್ರಾಯಪಟ್ಟರು.
ಮಂಡಲ ಅಧ್ಯಕ್ಷ ಪ್ರಸಾದ ಹೆಗಡೆ ಸೇರಿದಂತೆ ಪಕ್ಷದ ಪ್ರಮುಖರಾದ ಪ್ರಮೋದ ಹೆಗಡೆ, ಉಮೇಶ ಭಾಗ್ವತ, ಕೆ.ಟಿ. ಹೆಗಡೆ, ರಾಘವೇಂದ್ರ ಭಟ್, ವೆಂಕಟರಮಣ ಬೆಳ್ಳಿ, ಶೃತಿ ಹೆಗಡೆ, ಚಂದ್ರಕಲಾ ಭಟ್, ನಿರ್ಮಲಾ ನಾಯ್ಕ, ರಾಮು ನಾಯ್ಕ, ರಾಮಚಂದ್ರ ಚಿಕ್ಯನಮನೆ, ರವಿ ಕೈಟಕರ್, ರಜತ್ ಬದ್ದಿ, ಸೋಮು ನಾಯ್ಕ, ಗಿರೀಶ ಭಾಗ್ವತ, ವಿನೋದ ತಳೆಕರ್, ಗಣೇಶ ಪಾಠಣಕರ, ಪ್ರದೀಪ ಯಲ್ಲಾಪುರಕರ ಹಾಗೂ ಇತರರು ಉಪಸ್ಥಿತರಿದ್ದರು.