ಯಲ್ಲಾಪುರ: ಗ್ರಾಮದೇವಿ ಜಾತ್ರೆಯ ಸಂದರ್ಭದಲ್ಲಿ ಶಾಲಾ ಮೈದಾನವನ್ನು ಬಾಡಿಗೆಗೆ ನೀಡಿದ್ದರಿಂದ ಬಂದ ಆದಾಯವನ್ನು ಶಾಲೆಯ ಅಭಿವೃದ್ಧಿಗೆ ಬಳಸಿಕೊಂಡು ನೂತನ ತರಗತಿ ಕೊಠಡಿ ನಿರ್ಮಿಸಿರುವುದು ಗಮನಾರ್ಹವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ತರಗತಿ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ವರ್ಷದ ಯಲ್ಲಾಪುರ ಗ್ರಾಮದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ಗಾಗಿ ಶಾಲಾ ಮೈದಾನವನ್ನು ಬಾಡಿಗೆಗೆ ನೀಡಲಾಗಿತ್ತು. ಅದರಿಂದ ಬಂದ ಆದಾಯವನ್ನು ಬಳಸಿಕೊಂಡು ಶಾಲೆಯಲ್ಲಿ ನೂತನ ತರಗತಿ ಕೊಠಡಿ ನಿರ್ಮಿಸಿರುವುದು ಅರ್ಥಪೂರ್ಣ ಹಾಗೂ ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ದೊರೆಯುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಗಳು ಇನ್ನಷ್ಟು ನಡೆಯಬೇಕು ಎಂದು ಅವರು ಹೇಳಿದರು.
ನೂತನ ತರಗತಿ ಕೊಠಡಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲಿದ್ದು, ಶಾಲೆಯ ಮೂಲಸೌಕರ್ಯಕ್ಕೂ ಮತ್ತಷ್ಟು ಬಲ ದೊರೆತಂತಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ತಾಲೂಕು ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೋಸ್ಕೇರಿ, ಶಾಲೆಯ ಮುಖ್ಯೋಪಾಧ್ಯಾಯರು, ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.