ಯಲ್ಲಾಪುರ: ಯಲ್ಲಾಪುರ ತಾಲೂಕಿನ ಹೊಸಳ್ಳಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಮೇ 18ರಂದು ಸಂಭವಿಸಿದ್ದ ಕಾರು–ಟ್ಯಾಂಕರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಸೂರ ಗ್ರಾಮದ ರಾಮಪ್ಪ ಹಡಪದ (62) ಮೃತರು.
ಮೇ 18ರಂದು ಪಾರ್ಶ್ವವಾಯು ಚಿಕಿತ್ಸೆಗೆ ಸಂಬಂಧಿಕರೊಂದಿಗೆ ಕಾರವಾರ ಜಿಲ್ಲೆಯ ಹಳಗಾ ಗ್ರಾಮದ ಆರೋಗ್ಯ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ, ಅವರು ಪ್ರಯಾಣಿಸುತ್ತಿದ್ದ ಎರ್ಟಿಗಾ ಕಾರು ಹೊಸಳ್ಳಿ ಕ್ರಾಸ್ ಬಳಿ ಮುಂಭಾಗದಲ್ಲಿ ಸಾಗುತ್ತಿದ್ದ ಟ್ಯಾಂಕರ್ಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ರಾಮಪ್ಪ ಹಡಪದ ಅವರಿಗೆ ಬೆನ್ನು ಮತ್ತು ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಮತ್ತೋರ್ವ ಪ್ರಯಾಣಿಕ ಮನೋಜಕುಮಾರ್ ಅವರಿಗೂ ಗಾಯಗಳಾಗಿದ್ದವು.
ಗಾಯಗೊಂಡ ರಾಮಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಹಾಗೂ ನಂತರ ಶಹಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ.
ಅಪಘಾತದ ಸಂಬಂಧ ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.