ಯಲ್ಲಾಪುರ: ಸಾಲ ಮಾಡಿಕೊಂಡು ವಿಪರೀತ ಮದ್ಯಪಾನ ಮಾಡುತ್ತಿದ್ದ ಹಾಗೂ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ 38 ವರ್ಷದ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಬಾರೆಯ ಬೇಣದಗುಳಿ ಸ್ವಾಮಿಕೇರಿಯಲ್ಲಿ ನಡೆದಿದೆ.
ಮೃತರನ್ನು ಬೇಣದಗುಳಿ ಸ್ವಾಮಿಕೇರಿ ನಿವಾಸಿ ಕುಪ್ಪಯ್ಯ ತಿಮ್ಮಣ್ಣ ಕುಣಬಿ (38) ಎಂದು ಗುರುತಿಸಲಾಗಿದೆ. ಸೆ.18ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 11 ಗಂಟೆಯ ನಡುವಿನ ಅವಧಿಯಲ್ಲಿ ಅವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ತಿಮಣ್ಣ ಕುಣಬಿ ಯಲ್ಲಾಪುರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮೃತ ಕುಪ್ಪಯ್ಯ ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ವಿಪರೀತ ಸಾಲ ಮಾಡಿಕೊಂಡಿದ್ದರು. ಅಳತೆ ಮೀರಿ ಮದ್ಯಪಾನ ಮಾಡುತ್ತಿದ್ದು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಯಿಂದ ಇದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕುಟುಂಬದೊಂದಿಗೆ ಚರ್ಚಿಸಿಕೊಂಡು ಠಾಣೆಗೆ ಬಂದು ದೂರು ನೀಡಲು ವಿಳಂಬವಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.