ಯಲ್ಲಾಪುರ: ತಾಲೂಕಿನ ಸೋಮಾಪುರ ಗ್ರಾಮದ ದ್ಯಾಮವ್ವಾ ದೇವಸ್ಥಾನದಲ್ಲಿ ನಡೆದ ಕಾಣಿಕೆ ಡಬ್ಬಿ ಕಳ್ಳತನ ಪ್ರಕರಣವನ್ನು ಯಲ್ಲಾಪುರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ 29ರ ಸಂಜೆ 6.30 ಗಂಟೆಯಿಂದ ಜೂನ್ 2ರ ಬೆಳಿಗ್ಗೆ 9 ಗಂಟೆಯ ನಡುವಿನ ಅವಧಿಯಲ್ಲಿ, ಸೋಮಾಪುರ ಗ್ರಾಮದ ದ್ಯಾಮವ್ವಾ ದೇವಸ್ಥಾನದಲ್ಲಿದ್ದ ಕಾಣಿಕೆ ಡಬ್ಬಿ ಹಾಗೂ ಅದರಲ್ಲಿದ್ದ ಅಂದಾಜು 50 ಸಾವಿರ ರೂ ನಗದನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ದೇವಸ್ಥಾನದ ಪೂಜಾರಿ ಶ್ರೀಕಾಂತ ಅಪ್ಪಾರಾವ ಮಿರಾಶಿ ಅವರು ನೀಡಿದ ದೂರಿನ ಮೇರೆಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಜೂನ್ 5ರಂದು ಖಚಿತ ಮಾಹಿತಿ ಆಧರಿಸಿ ಆರೋಪಿತರಾದ ಜಯಂತಿನಗರ, ಕಿರವತ್ತಿಯ ಗೌಸಅಲಿ ಬಾಬುಸಾಬ ಮಿಶ್ರಕೋಟಿ (25) ಹಾಗೂ ಇಸ್ಲಾಂಪುರ ಗಲ್ಲಿಯ ಅಬ್ದುಲ್ ಹಮೀದ ಸಲೀಮಸಾಬ ಸೋಮನಕೊಪ್ಪ (38) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಆರೋಪಿಗಳು ಕಳ್ಳತನ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಆರೋಪಿತರಿಂದ ಕಳ್ಳತನವಾದ ಹಣದಲ್ಲಿ ಖರ್ಚಾಗದೆ ಉಳಿದಿದ್ದ 29,763 ರೂ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎನ್. (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ, ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಮೇಶ್ ಹಾನಾಪುರ ನೇತೃತ್ವದಲ್ಲಿ ಪಿಎಸ್ಐ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬಳೆ, ಶೇಡಜಿ ಚವ್ಹಾಣ ಹಾಗೂ ಇತರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.